ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಘಟನೆ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ. ಈ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಸ್ ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ಈ ವೇಳೆ ಎದುರಿನಿಂದ ಬೈಕ್ ಅಡ್ಡ ಬಂದಿದೆ. ಬಸ್ ಚಾಲಕ ಬೈಕ್ ಸವಾರನನ್ನು ಬಚಾವ್ ಮಾಡಲು ಯತ್ನಿಸಿದ್ದಾನೆ. ಆದರೆ ಬಸ್ ಬೈಕ್ಗೆ ಡಿಕ್ಕಿಯಾಗಿ ತೋಟಕ್ಕೆ ನುಗ್ಗಿದೆ. ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ರಾಜಪ್ಪ(44) ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ.
ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಹಾಗೂ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಗಾಯಗೊಂಡ ಬಾಲಕನೋರ್ವನನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಬಸ್ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ನೆರವಾಗಿದ್ದಾರೆ. ಬಳಿಕ ಗಾಯಗೊಂಡವರನ್ನು ಆಂಬ್ಯುಲೆನ್ಸ್ ಹಾಗೂ ಇತರ ವಾಹನಗಳ ಮೂಲಕ ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಘಟನೆ ಬಗ್ಗೆ ಮಾಹಿತಿ ದೊರೆತ ತಕ್ಷಣ ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
Laxmi News 24×7