ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ 4 ದಿನಗಳಿಂದ ಬಿಜೆಪಿ ಮುಖಂಡರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು (ಆ.20) ಧರಣಿ ಬಿಟ್ಟು ಏಕಾಏಕಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಮುಖಂಡರು – ಕಾರ್ಯಕರ್ತರು ಯತ್ನಿಸಿದ್ದಾರೆ. ಬ್ಯಾರಿಕೇಡ್ ತಳ್ಳಿ ಏಕಾಏಕಿ ಒಳಗೆ ನುಗ್ಗಿದ್ದಾರೆ. ಈ ವೇಳೆ ಸಂಭವಿಸಿದ ತಳ್ಳಾಟ – ನೂಕಾಟದಲ್ಲಿ ಪೊಲೀಸರು, ಬಿಜೆಪಿ ಕಾರ್ಯಕರ್ತರು ಕೆಳಗೆ ಬಿದ್ದಿದ್ದಾರೆ. ನೂಕು ನುಗ್ಗಲಿನಲ್ಲಿ ಚಪ್ಪಲಿಗಳು ಚೆಲ್ಲಾಪಿಲ್ಲಿಯಾಗಿವೆ. ಇದೇ ವೇಳೆ ನಾಗೇಂದ್ರ ಭಾವಚಿತ್ರವನ್ನು ಕಾಲಿನಲ್ಲಿ ತುಳಿದ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
ಡಿಸಿ ಕಚೇರಿ ಬಾಗಿಲು ಬಳಿ ಕಾರ್ಯಕರ್ತರನ್ನ ಪೊಲೀಸರು ತಡೆದಿದ್ದಾರೆ. ಪ್ರತಿಭಟನಾಕಾರರನ್ನ ವಶಕ್ಕೆ ಪಡೆದು, ವಾಹನದಲ್ಲಿ ಕರೆದೊಯದಿದ್ದಾರೆ. ಬಿಜೆಪಿ ಪ್ರತಿಭಟನೆ ಹಿನ್ನೆಲೆ ಪೊಲೀಸರು ವ್ಯಾಪಕ ಭದ್ರತೆ ಕೈಗೊಂಡಿದ್ದಾರೆ.
ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಾಗೇಂದ್ರರನ್ನು ಸಂಪುಟದಿಂದ ವಜಾ ಮಾಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ. ಬಿಜೆಪಿಯ ವಿವಿಧ ಮೋರ್ಚಾಗಳ ಪ್ರಮುಖರು ಸೇರಿದಂತೆ ನೂರಾರು ಕಾರ್ಯಕರ್ತರು ಧರಣಿಯಲ್ಲಿ ಭಾಗಿಯಾಗಿದ್ದಾರೆ.
Laxmi News 24×7