ಬೆಂಗಳೂರು: ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಡ್ಡಾಯ ಕನ್ನಡ ಪರೀಕ್ಷೆ ಆ.22ರಂದು ನಗರದಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡದಿರುವ ಅಭ್ಯರ್ಥಿಗಳು ನೇಮಕಾತಿ ಸಂದರ್ಭದಲ್ಲಿ ಕನ್ನಡ ಕಡ್ಡಾಯ ಪರೀಕ್ಷೆ ಬರೆಯಬೇಕು ಎನ್ನುವುದು ನಿಯಮ. ಆ ಪ್ರಕಾರ ಸುಮಾರು 6 ಸಾವಿರ ಮಂದಿ ಶನಿವಾರ (ಆ.22) ಪರೀಕ್ಷೆ ಬರೆಯಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಆಡಳಿತ ಅಧಿಕಾರಿ, ಭೂಮಾಪಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಇಂತಹ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಡಿಸಿಇಟಿ ಪ್ರವೇಶಕ್ಕೆ ಮತ್ತಷ್ಟು ಸಮಯ:
ಡಿಸಿಇಟಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಚಾಯ್ಸ್ ದಾಖಲಿಸಿ, ಎಂಜಿನಿಯರಿಂಗ್ ಕಾಲೇಜುಗಳಲ್ಲಿ 3ನೇ ಸೆಮಿಸ್ಟರ್ಗೆ ಸೇರಲು ಮತ್ತಷ್ಟು ಸಮಯ ನೀಡಲಾಗಿದೆ ಎಂದಿದ್ದಾರೆ.
ಚಾಯ್ಸ್ ದಾಖಲಿಸಲು ಆ.24ರಂದು ಮಧ್ಯಾಹ್ನ 1ಗಂಟೆವರೆಗೆ ಸಮಯ ನೀಡಲಾಗಿದೆ. ಮಧ್ಯಾಹ್ನ 2 ಗಂಟೆ ಒಳಗೆ ಚಲನ್ ಡೌನ್ಲೋಡ್ ಮಾಡಿಕೊಂಡು, ಶುಲ್ಕ ಪಾವತಿಸಬೇಕು. ಅದೇ ದಿನ ಸಂಜೆ 6 ಗಂಟೆ ಒಳಗೆ ಸೀಟು ಖಾತರಿ ಸ್ಲಿಪ್ ಡೌನ್ಲೋಡ್ ಮಾಡಿಕೊಂಡು ಆ.25ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ವಿವರಿಸಿದ್ದಾರೆ.
Laxmi News 24×7