ರಾಯಚೂರು: ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಹಮ್ಮಿಕೊಂಡಿರುವ ಬಿಜೆಪಿಯ ʻಬಳ್ಳಾರಿ ಚಲೋʼ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಯಚೂರಿನ ಸಿಂಧನೂರು ನಗರದಿಂದ ಕೊಪ್ಪಳದ ಕಾರಟಗಿ ವರೆಗೆ 26 ಕಿ.ಮೀ ಪಾದಯಾತ್ರೆ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ಸುನಿಲ್ ಕುಮಾರ್, ಮಹೇಶ ತೆಂಗಿನಕಾಯಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಸಿಂಧನೂರಿನ ಮಹಾತ್ಮ ಗಾಂಧಿ ವೃತ್ತದಿಂದ ಪಾದಯಾತ್ರೆ ಆರಂಭವಾಗಿದ್ದು, ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗೋಪೂಜೆ ಮಾಡುವ ಮೂಲಕ ಪಾದಯಾತ್ರೆ ಪ್ರಾರಂಬಿಸಲಾಯಿತು. ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಸ್ತುವಾರಿಯಲ್ಲಿ ಇಂದು ಪಾದಯಾತ್ರೆ ನಡೆಯುತ್ತಿದೆ.
ಪಿಂಚಣಿ, ವೃದ್ಧಾಪ್ಯ ವೇತನ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸುವಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ ಪಾದಯಾತ್ರೆಯಲ್ಲಿ ಧ್ವನಿ ಎತ್ತಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ಹಂಚಿನಾಳ ಕ್ಯಾಂಪ್ ಬಳಿ ಭೋಜನ ವಿರಾಮ ಆಯೋಜನೆ ಮಾಡಲಾಗಿದೆ.
ಸಿಂಧನೂರು, ವಿಜಯನಗರ, ಗದಗ, ಕನಕಗಿರಿ, ಹಾವೇರಿ, ಹುಬ್ಬಳ್ಳಿ ಹಾಗೂ ಧಾರವಾಡದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಸಹ ಬೃಹತ್ ಬಹಿರಂಗ ಸಭೆ ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಲಿದ್ದಾರೆ.
Laxmi News 24×7