ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತವಾಗಿದೆ. ರಾಜ್ಯದ ಅಧಿಕಾರಿಗಳ ಪ್ರಬಲ ವಾದದ ಹೊರತಾಗಿಯೂ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮಹತ್ವದ ಸೂಚನೆ ನೀಡಿದೆ.
ಈ ಮೂಲಕ ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನ ಎತ್ತಿಹಿಡಿದಿದೆ. CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ವರ್ಚ್ಯುಯಲ್ ಮೂಲಕ ಭಾಗವಹಿಸಿದ್ದರು. ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಕೂಡ ವರ್ಚ್ಯುಯಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮುನ್ನವೇ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ CWMA ಕೂಡ ಅದೇ ಪ್ರಮಾಣದ ನೀರು ಹರಿಸಲು ಆದೇಶಿಸಿರುವುದು ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ.
Laxmi News 24×7