ಗದಗ, ಫೆ.22- ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಅಮಿತ್ ಷಾ ಸಫಲರಾಗಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ. ಮಹದಾಯಿಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂದು ಸುಪ್ರೀಂಕೊರ್ಟ್ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಸರ್ಕಾರ ಸಹ ಈ ವಿಚಾರವನ್ನು ಕೇಂದ್ರದ ನಾಯಕರಿಗೆ ಮನವಿ ಮಾಡಿಕೊಟ್ಟಿತ್ತು.
ಈಗ ಗೋವಾ ಮತ್ತು ಮಹಾರಾಷ್ಟ್ರ ಸರ್ಕಾರ ಮನವೊಲಿಸುವಲ್ಲಿ ಕೇಂದ್ರದ ನಾಯಕರು ಯಶಸ್ವಿಯಾಗಿದ್ದಾರೆ. 14.3 ಟಿಎಂಸಿ ನಮ್ಮ ಪಾಲಿನ ನೀರು ಸದ್ಬಳಕೆ ಮಾಡಿಕೊಳ್ಳುವಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು. ಮಹದಾಯಿ ಯೋಜನೆ ಜಾರಿ, ಸಂಪನ್ಮೂಲ ಕ್ರೋಢೀಕರಣಕ್ಕೆ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸುತ್ತೇವೆ ಎಂದು ಸಚಿವರು ಹೇಳಿದರು.
ಗಂಭೀರ ಕ್ರಮ: ಪಾಕಿಸ್ತಾನ ಪರ ಘೋಷಣೆ ಹಾಗೂ ಫ್ರೀ ಕಾಶ್ಮೀರ್ ಪೋಸ್ಟರ್ ಪ್ರದರ್ಶನ ಮಾಡಿದ ಇಬ್ಬರ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ದೇಶಪ್ರೇಮದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಕಾನೂನಿನಡಿ ದೇಶದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಇಬ್ಬರು ದೇಶದ್ರೋಹಿಗಳನ್ನು ಪರಪ್ಪನ ಅಗ್ರಹಾರ ಒಂದೇ ಕೊಠಡಿಯಲ್ಲಿ ಇಟ್ಟಿದ್ದಾರೆ ಎಂದು ಸಚಿವರು ಹೇಳಿದರು.