ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ.
ಈ ಹಿನ್ನೆಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ವೇಳೆ ಶಿರಾ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಕುರಿತು ಮತ್ತು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಖಂಡರ ನಡುವೆ ಚರ್ಚೆ ನಡೆದಿದೆ.
ಕೊರೊನಾದಿಂದ ಗುಣಮುಖರಾದ ಬಳಿಕ ಇದೇ ಮೊದಲ ಬಾರಿಗೆ ಡಿಕೆಶಿ ಕಚೇರಿಗೆ ಆಗಮಿಸಿದ್ದು, ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಮಾಜಿ ಸಚಿವ ಟಿ.ಬಿ ಜಯಚಂದ್ರ, ಮಾಜಿ ಸಂಸದ ಮುದ್ದಹನುಮೇಗೌಡ, ಬಿ.ಎನ್ ಚಂದ್ರಪ್ಪ, ಮಾಜಿ ಶಾಸಕ ಕೆ.ಎನ್ ರಾಜಣ್ಣ ಸೇರಿದಂತೆ ಮತ್ತಿತರರ ನಾಯಕರು ಪಾಲ್ಗೊಂಡಿದ್ದರು.
ಶಿರಾ ಉಪಚುನಾವಣೆ ಟಿಕೆಟ್ ಗಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಮಾಜಿ ಶಾಸಕ ಕೆ.ಎನ್. ರಾಜಣ್ಣ ನಡುವೆ ತೀವ್ರ ಪೈಪೊಟಿವಿದ್ದು ಕೊನೆ ಕ್ಷಣದಲ್ಲಿ ಕೆಪಿಸಿಸಿ ಯಾರಿಗೆ ಮನ್ನಣೆ ಹಾಕುತ್ತೆ ಎಂಬುದನ್ನು ಕಾದು ನೋಡಬೇಕಾಗಿದೆ.