ಬೆಂಗಳೂರು : ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್ಗೆ ತೆರಳುತ್ತಿದ್ದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ತಡೆದು, ಬಂಧಿಸಿದ ಉತ್ತರ ಪ್ರದೇಶದ ಪೊಲೀಸರ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿರುವ ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಗುರುವಾರ ಟ್ವೀಟ್ ಮಾಡಿರುವ ದೇವೇಗೌಡರು, ಎಐಸಿಸಿ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಯುಪಿ ಸರಕಾರ ಎಚ್ಚರಿಕೆ ಮತ್ತು ಕಾಳಜಿಯಿಂದ ನೋಡಿಕೊಳ್ಳಬೇಕು. ಪ್ರತಿಭಟನೆ ಸಾಂವಿಧಾನಿಕ ಹಕ್ಕು. ಅವರು ಅತ್ಯಾಚಾರಕ್ಕೆ ಒಳಗಾದ ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂಬ ಉದ್ದೇಶಕ್ಕಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಯುಪಿ ಸಿಎಂ ಆದಿತ್ಯನಾಥ್ ಅವರನ್ನು ಆಗ್ರಹಿಸಿದ್ದಾರೆ.