ಹಾವೇರಿ: ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ.
ಮಹೇಶ್ ಪರಸಳ್ಳಿ(38) ಮತ್ತು ಮಂಜಪ್ಪ ಕರಿಯಪ್ಪನವರ (44) ಆತ್ಮಹತ್ಯೆ ಮಾಡಿಕೊಂಡ ರೈತರು. ಒಂದೂವರೆ ಎಕರೆ ಜಮೀನು ಹೊಂದಿದ್ದ ಮಹೇಶ್, ಬ್ಯಾಂಕ್ ಮತ್ತು ಕೈ ಸಾಲ ಸೇರಿ ಸುಮಾರು ನಾಲ್ಕೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದನು. ಇವರು ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆಯನ್ನು ಬೆಳೆದಿದ್ದರು. ಆದರೆ ಈ ಬಾರಿಯ ಬೆಳೆ ಹಾಳಾಗಿದ್ದಕ್ಕೆ ಬೇಸತ್ತು ಮಹೇಶ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಇತ್ತ ಮೂರು ಎಕರೆ ಜಮೀನು ಹೊಂದಿದ್ದ ಮಂಜಪ್ಪ, ಬ್ಯಾಂಕ್ ಮತ್ತು ಕೈಸಾಲ ಸೇರಿ ಸುಮಾರು ಎಂಟು ಲಕ್ಷ ರುಪಾಯಿ ಸಾಲ ಮಾಡಿಕೊಂಡು ಬೆಳೆ ಬೆಳೆದಿದ್ದರು. ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆ ಹಾಳಾಗಿದ್ದಕ್ಕೆ ಬೇಸತ್ತು ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಹಾವೇರಿ ರೈತರ ಮನೆಗೆ ಹಲಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.