ಬೆಂಗಳೂರು, ನ.24- ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ.
ಇಂದು ಹಿರಿಯ ಅ ಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ ಅವರು, ನೀರಾವರಿ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಅರಣ್ಯ ಇಲಾಖೆ ಕೇಳುವ ಅಗತ್ಯ ದಾಖಲಾತಿಗಳನ್ನು ತುರ್ತಾಗಿ ಒದಗಿಸಿ ಸರ್ಕಾರದ ಯೋಜನೆಗಳಿಗೆ ಅನುಮತಿ ಪಡೆದುಕೊಳ್ಳಲು ಪ್ರಯತ್ನಿಸುವಂತೆ ಸೂಚನೆ ನೀಡಿದ್ದಾರೆ.
ಸರ್ಕಾರ ನೀರಾವರಿ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸಿದೆ. ಕುಡಿಯುವ ನೀರು ಹಾಗೂ ಏತ ನೀರಾವರಿ ಯೋಜನೆಗಳನ್ನು ಆರಂಭಿಸಲು ಅರಣ್ಯ ಇಲಾಖೆಯ ಅನುಮತಿ ದೊರೆಯದೆ ಇದ್ದರೆ ತಾಂತ್ರಿಕ ಸಮಸ್ಯೆಯಾಗುತ್ತದೆ. ಹೀಗಾಗಿ ಜಲಸಂಪನ್ಮೂಲ ಇಲಾಖೆಯ ಅ ಧಿಕಾರಿಗಳು ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಿದ್ದಾರೆ.
ಮಹಾದಾಯಿ, ಮೇಕೆದಾಟು, ಗಟ್ಟಿ ಬಸವಣ್ಣದಂತಹ ಹಲವಾರು ಯೋಜನೆಗಳು ಡಿಪಿಆರ್ ಸಿದ್ಧಗೊಂಡಿದ್ದು , ರಾಜ್ಯ ಸರ್ಕಾರ ಅನುದಾನ ನೀಡಲು ಕೂಡ ಸಿದ್ಧ ಇದೆ. ಆದರೆ ಅರಣ್ಯ ಇಲಾಖೆ ಅನುಮತಿ ನೀಡದೆ ಇರುವುದರಿಂದ ಯೋಜನೆಗಳು ಇನ್ನೂ ಆರಂಭಗೊಂಡಿಲ್ಲ.