ಬೆಂಗಳೂರು, ಡಿ.6- ಗೋಹತ್ಯೆ ನಿಷೇಧ, ಲವ್ಜಿಹಾದ್, ಭೂ ಸುಧಾರಣೆ, ಎಪಿಎಂಸಿಯಂತಹ ವಿವಾದಿತ ಕಾಯ್ದೆಗಳ ಅಂಗೀಕಾರಕ್ಕೆ ವಿಧಾನಮಂಡಲದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಲು ಕಾಂಗ್ರೆಸ್ ನಿರ್ಧರಿಸಿದೆ. ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನೆಯಲ್ಲಿ ನಡೆದ ಉಭಯ ಸದನಗಳ ನಾಯಕರ ಹಾಗೂ ಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರದ ನಡವಳಿಕೆಗಳ ಕುರಿತು ತೀವ್ರ ಆಕ್ರೋಶ ವ್ಯಕ್ತವಾಯಿತು.
ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಯಾವುದೇ ಕಾನೂನುಗಳನ್ನು ಜಾರಿಗೆ ತರುತ್ತಿಲ್ಲ. ಬದಲಾಗಿ ವೋಟ್ ಬ್ಯಾಂಕ್ ದೃಷ್ಟಿಯಿಂದ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಕಾನೂನುಗಳನ್ನು ರೂಪಿಸುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಕೊರೊನಾ ಹಾವಳಿಯಿದೆ. ನೆರೆಯಿಂದ ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ಜಿಲ್ಲೆಗಳು ಸಂತ್ರಸ್ತವಾಗಿದೆ.
ಜನ ಸಾಮಾನ್ಯರಿಗೆ ನೆಲೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ ಬಗ್ಗೆ ಬಿಜೆಪಿ ಸರ್ಕಾರ ಕಿಂಚಿತ್ತೂ ಯೋಚನೆ ಮಾಡುತ್ತಿಲ್ಲ. ಬದಲಾಗಿ ರೈತರಿಗೆ, ಕೃಷಿಗೆ ಮಾರಕವಾಗಿರುವ ಭೂ ಸುಧಾರಣಾ ಕಾಯ್ದೆ , ಎಪಿಎಂಸಿ ಕಾಯ್ದೆಗಳನ್ನು ಮರುಮಂಡನೆ ಮಾಡಿ ಅಂಗೀಕಾರ ಪಡೆಯುವ ಹುನ್ನಾರ ನಡೆಸಿದೆ. ಜತೆಗೆ ಕಠಿಣವಾದ ಗೋಹತ್ಯೆ ನಿಷೇಧ ಕಾಯ್ದೆ ಕೂಡ ಜಾರಿಗೊಳಿಸಲು ಮುಂದಾಗುತ್ತಿದೆ. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಈ ಮಸೂದೆಗಳಿಗೆ ಅವಕಾಶ ನೀಡಬಾರದು ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಬಿಜೆಪಿಗೆ ಸಂಖ್ಯಾಬಲವಿದೆ. ಹಾಗಾಗಿ ಅಲ್ಲಿ ಅಂಗೀಕಾರ ಪಡೆದುಕೊಳ್ಳಲಿದೆ. ವಿಧಾನನಪರಿಷತ್ನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಸಂಖ್ಯೆ ಹೆಚ್ಚಿದೆ. ಆದರೆ, ಜೆಡಿಎಸ್ ನಾಯಕ ಹಾಗೂ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮಾತುಗಳನ್ನು ಗಮನಿಸಿದರೆ ಅವರು ವಿಧಾನಪರಿಷತ್ನಲ್ಲಿ ಸರ್ಕಾರಕ್ಕೆ ಬೆಂಬಲ ನೀಡುವ ಮುನ್ಸೂಚನೆ ಕಾಣುತ್ತಿದೆ. ಹೀಗಾಗಿ ಬಿಜೆಪಿ ಸರ್ಕಾರ ವಿವಾದಿತ ಮಸೂದೆಗಳಿಗೆ ಅಂಗೀಕಾರ ಪಡೆಯುವ ಸಾಧ್ಯತೆ ಹೆಚ್ಚಿದೆ.
Laxmi News 24×7