ನವದೆಹಲಿ, ಡಿ.6- ಕೃಷಿಗೆ ಸಂಬಂಧಪಟ್ಟ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಕರೆ ನೀಡಲಾರಿಗುವ ಭಾರತ್ ಬಂದ್ಗೆ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜ್ಯಗಳು ಬೆಂಬಲ ಘೋಷಿಸಿವೆ. ಕೃಷಿ ಕಾನೂನುಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು. ಅವುಗಳನ್ನು ಸಂಸತ್ನಲ್ಲಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪಂಜಾಬ್ನ ರೈತರು ದೆಹಲಿಗೆ ತೆರಳಿ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತರ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೂ ಕೇಂದ್ರ ಸರ್ಕಾರದೊಂದಿಗೆ ನಡೆದಿರುವ ಮೂರು ಸುತ್ತಿನ ಮಹತ್ವದ ಮಾತುಕತೆಗಳು ವಿಫಲವಾಗಿವೆ. ಬುಧವಾರ ಮತ್ತೊಂದು ಸುತ್ತಿನ ಮಾತುಕತೆಗೆ ಕೇಂದ್ರ ಸರ್ಕಾರ ಆಹ್ವಾನಿಸಿದೆ. ಕೃಷಿ ಕಾನೂನು ತಿದ್ದುಪಡಿಗಳನ್ನು ಸಂಪೂರ್ಣವಾಗಿ ಹಿಂಪಡೆಯುವವರೆಗೂ ಯಾವುದೇ ಮಾತುಕತೆಗಳು ಫಲಪ್ರದವಾಗುವುದಿಲ್ಲ ಎಂದು ರೈತ ಮೂಖಂಡರು ಪಟ್ಟು ಹಿಡಿದಿದ್ದಾರೆ. ಈ ನಡುವೆ ಡಿ.8ರಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ಭಾರತ್ ಬಂದ್ಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ರೈತರ ಪ್ರತಿಭಟನೆ ಯಶಸ್ವಿಯಾಗಲಿ ಎಂದು ಹಾರೈಸಿರುವ ಕಾಂಗ್ರೆಸ್ ವಕ್ತಾರ ಪವನ್ಖೇಹರ್, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ಗಾಂಧಿ ಬಂದ್ಗೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಈ ನಡುವೆ ತೆಲಂಗಾಣದ ಮುಖ್ಯಮಂತ್ರಿ ಹಾಗೂ ಟಿಎಸ್ಆರ್ನ ಅಧಿನಾಯಕ ಚಂದ್ರಶೇಖರ್ ರಾವ್ ಕೂಡ ಭಾರತ್ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಾದ್ಯಂತ ನಡೆಯುತ್ತಿರುವ ಬಂದ್ನಲ್ಲಿ ನಾವು ಸಕ್ರಿಯವಾಗಿ ಭಾಗವಹಿಸುತ್ತೇವೆ. ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಚಂದ್ರಶೇಖರ್ ರಾವ್ ಹೇಳಿದ್ದಾರೆ. ರೈತರ 11 ದಿನಗಳ ಪ್ರತಿಭಟನೆಯಿಂದಾಗಿ ದೆಹಲಿಯಲ್ಲಿ ಸಂಚಾರದ ವ್ಯವಸ್ಥೆ ಅಸ್ತವ್ಯಸ್ತವಾಗಿದ್ದು, ಗಡಿ ಭಾಗಗಳು ಮುಚ್ಚಲ್ಪಟ್ಟಿವೆ. ಹಂತ ಹಂತವಾಗಿ ವಿವಿಧ ರಾಜ್ಯಗಳು ಬೆಂಬಲ ವ್ಯಕ್ತಪಡಿಸುತ್ತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ.
Laxmi News 24×7