ಬೆಂಗಳೂರು, ಡಿ.20- ರಾಜ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ರೈತರು ಮತ್ತು ಕಾರ್ಮಿಕರು ಪ್ರತಿಭಟನೆ ಹಾಗೂ ಸತ್ಯಾಗ್ರಹಗಳಲ್ಲಿ ತೊಡಗಿದ್ದಾರೆ. ಪ್ರತಿಭಟನಾ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಬಿಡದಿಯ ಟೊಯೋಟಾ ಕಂಪೆನಿ ಕೈಗಾರಿಕಾ ಪ್ರದೇಶದಲ್ಲಿ ಹಲವು ಘಟಕಗಳನ್ನು ಹೊಂದಿದೆ. ಅದರ ಒಂದು ಘಟಕದಲ್ಲಿ ಸುಮಾರು ಎರಡು ಸಾವಿರ ಜನರು ಖಾಯಂ ನೌಕರರಾಗಿ ಕೆಲಸ ಮಾಡುತ್ತಿದ್ದರು. ಈ ಕಾರು ಉತ್ಪಾದನಾ ಘಟಕವನ್ನು ಲಾಕೌಟ್ ಮಾಡಲಾಗಿದೆ. ಕೇಂದ್ರವು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತಂದ ಕೂಡಲೇ ಅದನ್ನು ನೆಪವಾಗಿಟ್ಟುಕೊಂಡು ಸುಸೂತ್ರವಾಗಿ ನಡೆಯುತ್ತಿದ್ದ ಈ ಘಟಕದಲ್ಲಿ ನಿರ್ದಿಷ್ಟ ಕಾಲಾವಯ ಕಾರ್ಮಿಕರನ್ನು ನೇಮಿಸಿಕೊಂಡು ಹೆಚ್ಚು ಲಾಭ ಗಳಿಸಬಹುದು ಎಂಬ ಉದ್ದೇಶದಿಂದ ಕಿರುಕುಳ ನೀಡುತ್ತಿವೆ ಎನ್ನುವುದು ಕಾರ್ಮಿಕರ ಆರೋಪ.
ಈ ಶೋಷಣೆಯನ್ನು ಪ್ರಶ್ನಿಸಿದ ನೌಕರರನ್ನು ಕಂಪೆನಿ ಅಮಾನತು ಮಾಡಿದೆ. ಈ ಬಗ್ಗೆ ಪ್ರತಿಭಟನೆಗೆ ಕೂತರೆ ಕಂಪೆನಿಗಳು ಕ್ಯಾರೆ ಎನ್ನುತ್ತಿಲ್ಲ. ಬದಲಾಗಿ ಲಾಕೌಟ್ ಮಾಡಿವೆ. ಕಾರ್ಮಿಕರ ಪ್ರತಿಭಟನೆ 40ನೆ ದಿನಕ್ಕೆ ಕಾಲಿಟ್ಟರೂ ಇದುವರೆಗೂ ಕಂಪೆನಿ ಲಾಕೌಟ್ ತೆರವುಗೊಳಿಸಿ ಮಾತುಕತೆಗೆ ಮುಂದಾಗಿಲ್ಲ.
ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪೆನಿಯಲ್ಲಿ ಸುಮಾರು 9833 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 8,490 ಗುತ್ತಿಗೆ ಕಾರ್ಮಿಕರು, ಸುಮಾರು 1343 ಖಾಯಂ ಕಾರ್ಮಿಕರಿದ್ದಾರೆ. ಈ ಕಂಪೆನಿ ಅಮೆರಿಕದ ಪ್ರತಿಷ್ಠಿತ ಮತ್ತು ಜಾಗತಿಕ ಮಟ್ಟದಲ್ಲಿ ಅತ್ಯಂತ ಶ್ರೀಮಂತ ಕಂಪೆನಿಯಾದ ಆಪಲ್ (ಐ-ಫೋನ್) ಕಂಪೆನಿಗೆ ಉಪಕರಣಗಳನ್ನು ತಯಾರಿಸಿ ಕೊಡುತ್ತಿದೆ.
Laxmi News 24×7