ಬೆಂಗಳೂರು (ಜ. 5): ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಇನ್ನೇನು 2 ತಿಂಗಳು ಕಳೆದರೆ ಬೇಸಿಗೆಯೂ ಶುರುವಾಗಲಿದೆ. ಆದರೂ ಕರ್ನಾಟಕದಲ್ಲಿ ಮಳೆ ಮಾತ್ರ ನಿಂತಿಲ್ಲ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ 2 ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ಜ. 8ರವರೆಗೆ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಮೂರು ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಜನವರಿ 8ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.