ಬೆಳಗಾವಿ – ರಸ್ತೆ ಸೇರಿದಂತೆ ಯಾವುದೇ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಎಲ್ಲ ಕಾಮಗಾರಿಗಳೂ ಸಮರ್ಪಕವಾಗಿ ನಡೆಯಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರ, ಉಚಗಾಂವ ಹಾಗೂ ಗೋಜಗಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿ ನಿರ್ಮಾಣದ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸಿದ ಅವರು, ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚಿಸಿ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚನೆಯನ್ನು ನೀಡಿದರು.
ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ನಿಗದಿತ ಗುರಿ ಇಟ್ಟುಕೊಂಡು ನಾನು ಕೆಲಸ ಮಾಡುತ್ತಿದ್ದೇನೆ. ಕೊರೋನಾ, ಪ್ರವಾಹದಂತಹ ಪ್ರಕೃತಿಯ ಅಸಹಕಾರದಿಂದಾಗಿ ಸ್ವಲ್ಪಮಟ್ಟಿಗೆ ಅಡೆತಡೆ ಉಂಟಾಗಿರಬಹುದು. ಆದರೆ ನನ್ನ ಗುರಿ ಮತ್ತು ಯೋಜನೆಯಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ. ಕ್ಷೇತ್ರದ ಜನರ ಸಹಕಾರಿ ನನಗೆ ಸಂಪೂರ್ಣ ಸಿಗುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಕ್ಷೇತ್ರ ಅಭಿವೃದ್ಧಿಗೊಳ್ಳುತ್ತಿರುವುದರಿಂದ ಜನರು ನೆಮ್ಮದಿ ಕಾಣುತ್ತಿದ್ದಾರೆ ಎಂದು ಹೆಬ್ಬಾಳಕರ್ ತಿಳಿಸಿದರು.
ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಭೇರಿ ಭಾರಿಸಿದೆ. ಜನರು ಅಭಿವೃದ್ಧಿಯ ಪರವಾಗಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಪರಸ್ಪರ ಸಹಕಾರದಿಂದ ಇದೇ ರೀತಿ ಅಭಿವೃದ್ಧಿಯತ್ತ ಮುನ್ನಡೆಯೋಣ ಎಂದು ಹೆಬ್ಬಾಳಕರ್ ಜನರಲ್ಲಿ ವಿನಂತಿಸಿದರು.