ಬೆಳಗಾವಿ – ನೂರು ವರ್ಷದ ಬಳಿಕ ನಡೆಯುತ್ತಿರುವ ಹಿಂಡಲಗಾ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆಯ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು.
ಮಾರ್ಚ್ 16ರಿಂದ 20ರ ವರೆಗೆ ಜಾತ್ರೆ ನಡೆಯಲಿದ್ದು, ಜಾತ್ರೆಯ ಹಿನ್ನೆಲೆಯಲ್ಲಿ ಇಡೀ ಗ್ರಾಮದಲ್ಲಿ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಜಾತ್ರಾ ಮಹೋತ್ಸವಕ್ಕೆ ಯಾವುದೇ ಅಡ್ಡಿ ಆತಂಕಗಳು, ಅಹಿತಕರ ಘಟನೆಗಳು ನಡೆಯದ ಹಾಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಜೊತೆ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಮನವಿಯನ್ನು ಸಲ್ಲಿಸಿ ಜಿಲ್ಲಾಧಿಕಾರಿಗಳ ಜೊತೆ ಸುಧೀರ್ಘವಾಗಿ ಚರ್ಚಿಸಿದರು.
ಕಳೆದ ವರ್ಷ ಜರುಗಬೇಕಾಗಿದ್ದ ಈ ಜಾತ್ರಾ ಮಹೋತ್ಸವವು ಕೊರೊನಾ ಆವರಿಸಿದ್ದ ಕಾರಣ ರದ್ದುಗೊಂಡಿತ್ತು, ಈ ವರ್ಷ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾಧಿಗಳಿಗೆ ಯಾವುದೇ ತೊಂದರೆಗಳಾಗಬಾರದು ಎನ್ನುವ ಉದ್ದೇಶದಿಂದ ಮೂಲಭೂತ ಸೌಕರ್ಯ, ಪೊಲೀಸ್ ಭದ್ರತೆ, ವಿದ್ಯುತ್ ಸೌಲಭ್ಯ, ರಸ್ತೆ ಸಂಪರ್ಕ, ನೀರಿನ ವ್ಯವಸ್ಥೆ, ಆರೋಗ್ಯ, ಅಂಬ್ಯುಲೈನ್ಸ್ ವ್ಯವಸ್ಥೆ ಸೇರಿದಂತೆ ಒಟ್ಟಾರೆಯಾಗಿ ಜಾತ್ರೆ ಒಂದು ಶಿಸ್ತು, ಸಂಯಮದಿಂದ ಕೂಡಿರಬೇಕೆನ್ನುವ ಹಿನ್ನೆಲೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್
ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.
Laxmi News 24×7