ಬೆಂಗಳೂರು /ಧಾರವಾಡ ; ಕರ್ನಾಟಕ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ” ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಾರಿಗೆ ನೌಕರರನ್ನು 6ನೇ ವೇತನ ಆಯೋಗದ ಅಡಿ ತರಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದಾಗಿ ಸರ್ಕಾರಿ ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಖಾಸಗಿ ಸೇವಾ ವಾಹನಗಳು, ಶಾಲಾ ವಾಹನಗಳು, ಮ್ಯಾಕ್ಸಿ ಕ್ಯಾಬ್ಗಳು, ಪ್ರವಾಸಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಈ ಕುರಿತು ಮಾಹಿತಿ ನೀಡಿದ್ದಾರೆ. ಒಪ್ಪಂದದ ವಾಹನಗಳಿಗೆ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 87/1/ಸಿ ಅಡಿಯಲ್ಲಿ ತಾತ್ಕಾಲಿಕ ರಹದಾರಿಗಳನ್ನು ನೀಡಿ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆಯಾಗದಂತೆ” ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಏಪ್ರಿಲ್ 7ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.”ಧಾರವಾಡ ಜಿಲ್ಲೆಯಲ್ಲಿ ಲಭ್ಯವಿರುವ ಶಾಲಾ ವಾಹನಗಳು, ಖಾಸಗಿ ಬಸ್ಗಳು, ಹಾಗೂ ಮ್ಯಾಕ್ಸಿಕ್ಯಾಬ್ಗಳ ಸಂಖ್ಯೆ ಮತ್ತು ಸಾರ್ವಜನಿಕ ಬಸ್ ಸಂಚರಿಸುವ ಮಾರ್ಗಗಳ ವಿವರ ಎಲ್ಲವನ್ನೂ ಕ್ರೋಢೀಕರಿಸಿ ಅಗತ್ಯ ಏರ್ಪಾಡುಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
“ಸಾರಿಗೆ ಸಂಸ್ಥೆಯ ಅಧಿಕಾರಿಗಳು, ಬಸ್ಗಳು ಸಂಚರಿಸುವ ಅಧಿಕ ಪ್ರಯಾಣಿಕರು ಬಳಸುವ ಮಾರ್ಗಗಳ ವಿವರಗಳನ್ನು ಒದಗಿಸಬೇಕು. ಮುಷ್ಕರದ ಅವಧಿಯಲ್ಲಿ ತಾತ್ಕಾಲಿಕವಾಗಿ ಬಸ್ಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕುರಿತು ಸೂಕ್ತ ಕ್ರಮ ವಹಿಸಬೇಕು” ಎಂದು ಸೂಚಿಸಿದರು.ಖಾಸಗಿ ವಾಹನಗಳ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನೀಲನಕ್ಷೆ ಸಿದ್ಧಪಡಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆಯನ್ನು ಕೊಟ್ಟಿದ್ದಾರೆ.