ಬೆಂಗಳೂರು: ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ ಎಂದಿದ್ದಾರೆ.
18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿ ಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು ಎಂದು ಎಚ್ ಡಿಕೆ ಟೀಕಿಸಿದ್ದಾರೆ.