ಚಿಕ್ಕೋಡಿ/ಬೆಳಗಾವಿ: ಅನುಮತಿ ಪಡೆಯದೇ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮದುವೆ ಸಮಾರಂಭದ ಆಯೋಜಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿ ಕುಟಂಬಕ್ಕೆ 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮದಲ್ಲಿ ನಡೆದಿದೆ.
ಕಮತನೂರು ಗ್ರಾಮದ ವರ ಕಾಶಿನಾಥ ಕಾಡಿ ಹಾಗೂ ಅವರಗೋಳ ಗ್ರಾಮದ ವಧು ಕಾಂಚನಾ ಬಾಳಾಜಿ ಅವರ ಮದುವೆಯನ್ನು ಶುಕ್ರವಾರ ಕಮತನೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿರಲಿಲ್ಲ. ಸಮಾರಂಭದಲ್ಲಿ 510ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಗ್ರಾಮ ಪಂಚಾಯಿತಿ ಪಿಡಿಒ ಮಹೇಶ್ ಯಡವನ್ನವರ್ ದಾಳಿ ನಡೆಸಿದ್ದು, ಕೋವಿಡ್-19 ನಿಯಮ ಉಲ್ಲಂಘನೆ ಹಿನ್ನೆಲೆ ರಾಷ್ಟ್ರೀಯ ವಿಪತ್ತು ಕಾಯ್ದೆಯಡಿ ವಧು-ವರರ ಪೋಷಕರಿಂದ ದಂಡ ವಸೂಲಿ ಮಾಡಲಾಗಿದೆ. ದಾಳಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಫಕ್ಕಿರೇಶ್, ಸಿಬ್ಬಂದಿ ಸತೀಶ ಮಗದುಮ್ಮ, ಸಂಜು ನಿಕ್ಕಂ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದು, ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.