ನವದೆಹಲಿ: ಕೇಂದ್ರ ಸರ್ಕಾರದ ಅಧಿಕೃತ ಆದೇಶಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯ ಸರ್ಕಾರ ಲಾಕ್ಡೌನ್ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಲಾಕ್ಡೌನ್ ವಿಸ್ತರಿಸಿದ ರಾಜ್ಯವಾಗಿದೆ.
ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾತನಾಡಿರುವ ಸಿಎಂ ಉದ್ಧವ್ ಠಾಕ್ರೆ ತಮ್ಮ ಲಾಕ್ಡೌನ್ ವಿಸ್ತರಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಇದೇ ವೇಳೆ ಈ ಕಠಿಣ ಸಂದರ್ಭದಲ್ಲಿ ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ.
ರಾಜ್ಯದಲ್ಲಿ ಸೋಂಕು ಕಾಣಿಸಿಕೊಂಡು ಸೋಮವಾರಕ್ಕೆ ಐದು ವಾರಗಳಾಗಲಿದೆ. ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯಲ್ಲೂ ಉದ್ಧವ್ ಠಾಕ್ರೆ ಲಾಕ್ಡೌನ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು. ಲಾಕ್ಡೌನ್ ತೆರವು ಮಾಡುವುದರಿಂದ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಹೆಚ್ಚು ಸೋಂಕು ಕಾಣಿಸಿಕೊಂಡಿದ್ದು ಪರಿಸ್ಥಿತಿ ಕೈ ಮೀರಲು ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದರು.