ಬೆಂಗಳೂರು, ಏ.14- ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಯಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಎರಡನೇ ಬಾರಿಗೆ ಮೇ 3ರವರೆಗೆ ಲಾಕ್ ಡೌನ್ ವಿಸ್ತರಿಸಿರುವುದಕ್ಕೆ ನಮ್ಮ ವಿರೋಧ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಮದ್ದು. ಇದರಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ.
ಆದರೆ ರೈತರು, ದಿನ ನಿತ್ಯ ಕೂಲಿ ಮಾಡುವವರಿಗೆ ಮೋದಿ ತಮ್ಮ ಭಾಷಣದಲ್ಲಿ ಏನನ್ನು ಘೋಷಣೆ ಮಾಡಿಲ್ಲ. ಕೃಷಿ ಸಾಲದ ಕಂತನ್ನು ಮೂರು ತಿಂಗಳ ನಂತರ ಬಡ್ಡಿ ಸಮೇತ ಮಾಡಿ ಎಂದರೆ ಯಾರಿಗೆ ಲಾಭವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ಲಾಕ್ ಡೌನ್ ಘೋಷಣೆ ಮಾಡಿ ಎಲ್ಲ ವಹಿವಾಟು ಸ್ಥಗಿತಗೊಳಿಸಿದ ಮೇಲೆ ಸಾಲ ತೀರಿಸಲು ಹೇಗೆ ಸಾಧ್ಯ. ಲಾಕ್ ಡೌನ್ ಅವಧಿ ಮುಗಿದ ಮೇಲೆ ಬಡ್ಡಿ ಸಮೇತ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕೃಷಿ ಸಾಲವನ್ನೇ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
Laxmi News 24×7