ಕಲಬುರ್ಗಿ: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ( Corona Case ) ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ ಸೆಮಿ ಲಾಕ್ ಡೌನ್, ವೀಕೆಂಡ್ ಕರ್ಪ್ಯೂ ಜಾರಿಗೆ ಸರ್ಕಾರ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನಲಾಗುತ್ತಿದೆ. ಇಂದಿನ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಚರ್ಚಿಸಿ, ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಅಲ್ಲದೇ ರಾಜ್ಯದಲ್ಲಿ ಮತ್ತೆ ಶಾಲಾ-ಕಾಲೇಜು ಬಂದ್ ( School and College Close ) ಬಗ್ಗೆಯೂ ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಕಲಬುರ್ಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಸಂಜೆ ರಾಜ್ಯದಲ್ಲಿ ಕೊರೋನಾ ಹೆಚ್ಚಳ ನಿಯಂತ್ರಣ ಕ್ರಮ ಸಂಬಂಧ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ಸಭೆಯನ್ನು ನಡೆಸಲಾಗುತ್ತಿದೆ. ಈ ಸಭೆಯಲ್ಲಿ ತಜ್ಞರು ಯಾವೆಲ್ಲಾ ಸಲಹೆಗಳನ್ನು ನೀಡುತ್ತಾರೆ ಎಂಬುದನ್ನು ಚರ್ಚಿಸಲಾಗುತ್ತದೆ. ಈ ಬಳಿಕ ಕೊರೋನಾ ನಿಯಂತ್ರಣಕ್ಕಾಗಿ ಗುರುವಾರ ನಡೆಯುವಂತ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಈಗಾಗಲೇ WHO ಹಲವಾರು ಎಚ್ಚರಿಕೆಗಳನ್ನು ನೀಡಿದೆ. ಭಾರತ ಸರ್ಕಾರವೂ ಎಚ್ಚರಿಕೆಗಳನ್ನು ನೀಡಿದೆ. ಇತ್ತ ಮಹಾರಾಷ್ಟ್ರ ಮತ್ತು ಕೇರಳದಲ್ಲಿಯೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದರ ಬಗ್ಗೆ ಕಟ್ಟೆಚ್ಚರ ವಹಿಸಬೇಕಿದೆ. ಇದೇ ಕಾರಣದಿಂದಾಗಿ ಗಡಿಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇನ್ನಷ್ಟು ಕಠಿಣ ಕ್ರಮಗಳನ್ನು ಕೊರೋನಾ ನಿಯಂತ್ರಣಕ್ಕಾಗಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚಳದಿಂದಾಗಿ ಶಾಲಾ-ಕಾಲೇಜು ಬಂದ್ ಮಾಡಲಾಗುತ್ತಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಬಸವರಾಜ ಬೊಮ್ಮಾಯಿ, ಈ ಬಗ್ಗೆಯೂ ತಜ್ಞರ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ತಜ್ಞರು ಯಾವೆಲ್ಲಾ ಸಲಹೆ, ಶಿಫಾರಸ್ಸುಗಳನ್ನು ನೀಡುತ್ತಾರೋ ಆ ಸಲಹೆ ಆಧರಿಸಿ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಶಾಲಾ-ಕಾಲೇಜು ಬಂದ್ ಬಗ್ಗೆಯೂ ತಜ್ಞರ ಸಭೆಯ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.