ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ (30) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.
‘ಯಡಿಯೂರಪ್ಪ ಪುತ್ರಿ ಪದ್ಮಾವತಿಯವರ ಮಗಳು, ವೈದ್ಯೆಯಾಗಿದ್ದ ಸೌಂದರ್ಯ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯ ಡಾ.ನೀರಜ್ ಜೊತೆ ಮೂರು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ 9 ತಿಂಗಳ ಮಗು ಇದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ವಸಂತನಗರದಲ್ಲಿರುವ ಲೆಗೆಸಿ ಅಪಾರ್ಟ್ಮೆಂಟ್ ಸಮುಚ್ಚಯದ ಫ್ಲ್ಯಾಟ್ನಲ್ಲಿ ದಂಪತಿ ವಾಸವಿದ್ದರು. ಅದೇ ಮನೆಯಲ್ಲೇ ಸೌಂದರ್ಯ ಮೃತಪಟ್ಟಿದ್ದಾರೆ. ಅವರ ಸಾವಿನ ಬಗ್ಗೆ ಪತಿ ನೀರಜ್ ಹಾಗೂ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಅದನ್ನು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.
ಗುರುವಾರವಷ್ಟೇ ಬಂದಿದ್ದ ಸೌಂದರ್ಯ: ‘ಹೆರಿಗೆಗೆಂದು ಸೌಂದರ್ಯ ತವರು ಮನೆಗೆ ಹೋಗಿದ್ದರು. ಕೆಲದಿನ ಆಸ್ಪತ್ರೆಯಲ್ಲಿ ಇದ್ದರು. ಮಗು ಜನಿಸಿದ ಬಳಿಕ ಯಡಿಯೂರಪ್ಪ ಅವರ ಮನೆಯಲ್ಲಿ ಕೆಲ ತಿಂಗಳು ತಂಗಿದ್ದರು. ಅಲ್ಲಿಂದ, ಮಗು ಸಮೇತ ಗುರುವಾರವಷ್ಟೇ (ಜ.27) ಫ್ಲ್ಯಾಟ್ಗೆ ಬಂದಿದ್ದರು’ ಎಂದು ಅಧಿಕಾರಿ ಹೇಳಿದರು.