ಹುಬ್ಬಳ್ಳಿ, – ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ 2020ನೆ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬದಲಾಗಿ ವಿದ್ಯಾರ್ಥಿಗಳನ್ನು ಉತ್ತಿರ್ಣರನ್ನಾಗಿ ಘೋಷಣೆ ಮಾಡುವುದು ಉತ್ತಮವಾಗಿದೆ.
ಈ ಸಂಬಂಧ ಪರಿಶೀಲನೆ ನಡೆಸಲು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಎಸ್.ಹಿರೇಮಠ ಮನವಿ ಸಲ್ಲಿಸಿದ್ದಾರೆ.ಸದ್ಯಕ್ಕೆ ಕೊರೋನಾ ಭೀತಿಯಿಂದ ರಾಜ್ಯದ ಪರಿಸ್ಥಿತಿ ಸುಧಾರಿಸುವುದು ಕಷ್ಟವಾಗಿರುವುದರಿಂದ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ.
ಅಲ್ಲದೇ ಈಗಾಗಲೇ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಈ ಹಿಂದಿನ ಪರೀಕ್ಷೆಯ ಆಧಾರದ ಮೇಲೆ ಉತ್ತೀರ್ಣ ಮಾಡಿರುವ ರೀತಿಯಲ್ಲೇ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಮುಂದಿನ ತರಗತಿಗೆ ಕಳುಹಿಸುವುದು ಉತ್ತಮ ಎಂದು ತಿಳಿಸಿದ್ದಾರೆ.
ಇನ್ನೂ ಧಾರವಾಡ ವ್ಯಾಪ್ತಿಯಲ್ಲಿ 700ಕ್ಕಿಂತ ಹೆಚ್ಚಿಗೆ ಪರೀಕ್ಷಾ ಕೇಂದ್ರಗಳಿದ್ದು, 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಂದು ಕೇಂದ್ರದಲ್ಲಿ 350-400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟ. ಈ ಹಿನ್ನೆಲೆಯಲ್ಲಿ ಈ ಹಿಂದೆ ನಡೆಸಿದ ಪರೀಕ್ಷೆಯ ಆಧಾರದ ಮೇಲೆ ಗ್ರೆಡಿಂಗ್ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಎಂದು ಮನವಿ ಪತ್ರದಲ್ಲಿ ಕೋರಿದ್ದಾರೆ.
ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಎಸ್.ಹಿರೇಮಠ ಪ್ರಸ್ತಾವನೆ ಕುರಿತು ಅಚ್ಚರಿ ವ್ಯಕ್ತಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಆಯುಕ್ತರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.