ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹರ್ಷ ಅವರ ಕುಟುಂಬದವರನ್ನು ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು.
ಸಚಿವರಾದ ಕೆ.ಎಸ್.ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಭಾನುಪ್ರಕಾಶ್, ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಈ ಸಂದರ್ಭದಲ್ಲಿ ಇದ್ದರು.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಅವರು, ಹಿಂದೂ ಸಂಘಟನೆಯ ಹರ್ಷ ಕಗ್ಗೊಲೆ (Harsha Murder) ಆಗುವ ಕಲ್ಪನೆ ನಮಗ್ಯಾರಿಗೂ ಇರಲಿಲ್ಲ. ಕಗ್ಗೊಲೆ ಆದ ತಕ್ಷಣ ಕೊಲೆಗಡುಕ ಗೂಂಡಾಗಳನ್ನು ರಾಜ್ಯ ಸರ್ಕಾರ ಬಂಧಿಸಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಇಲ್ಲಿಗೆ ಬಂದು ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಸಹಕಾರದ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.