ಮಂಗಳೂರು: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಯನ್ನ ತಕ್ಷಣ ಬಂಧಿಸವಂತೆ ಆಗ್ರಹಿಸಿದ್ದಾರೆ.
ಧರ್ಮಸ್ಥಳದ ಕನ್ಯಾಡಿ ನಿವಾಸಿ ದಿನೇಶ್ ಎಂಬುವರನ್ನು ಕಿಟ್ಟು ಯಾನೆ ಕೃಷ್ಣ ಎಂಬಾತ ಹತ್ಯೆಗೈದಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಮುಂದಿನ 24 ಗಂಟೆಯೊಳಗೆ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ
ಘಟನೆ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಬಜರಂಗ ದಳದ ನಾಯಕನಾಗಿರುವ ಕಾರಣ, ಮೃತನ ಕುಟುಂಬ ಆತಂಕಕ್ಕೀಡಾಗಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ ಮಣಿಯದೆ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.