: ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ತಡೆಯುವ ಅಧಿಕಾರ ಜಿಲ್ಲಾಧಿಕಾರಿಗೆ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕಟ್ಟಡ ನಿರ್ಮಿಸುತ್ತಿರುವ ಜಾಗ ತಮ್ಮದು ಹಾಗೂ ಅದು ಕೃಷಿ ಭೂಮಿಯಾಗಿದೆ. ಅಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಲಕ್ಷಣರೆಡ್ಡಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಪೀಠ ಈ ತೀರ್ಪು ನೀಡಿದೆ.
ಪೀಠ ತನ್ನ ತೀರ್ಪಿನಲ್ಲಿ, ಅರ್ಜಿದಾರರು ತಮಗೆ ಸೇರಿದ ಕೃಷಿ ಭೂಮಿಯಲ್ಲಿ ಕೆಲ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗೆ ನಿರ್ದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಆದರೆ, ಅರ್ಜಿದಾರರು ಇದೇ ವಿಚಾರವಾಗಿ ಸಿವಿಲ್ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಅಲ್ಲಿ ತಡೆಯಾಜ್ಞೆ ಕೋರಿಕೆ ತಿರಸ್ಕೃತಗೊಂಡಿದೆ. ಈ ವಿಚಾರವನ್ನು ಮುಚ್ಚಿಟ್ಟು ಜಿಲ್ಲಾಧಿಕಾರಿಗೆ ನಿರ್ದೇಶನ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದು ನ್ಯಾಯಾಂಗ ಪ್ರಕ್ರಿಯೆಯ ಸ್ಪಷ್ಟ ದುರ್ಬಳಕೆ ಎಂದಿದೆ.
ಅಲ್ಲದೇ, ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95(2)ರ ನಿಯಮದಂತೆ ಜಿಲ್ಲಾಧಿಕಾರಿಯು ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡದಂತೆ ತಡೆಗಟ್ಟುವ ಅಧಿಕಾರ ಹೊಂದಿದ್ದು, ಅದನ್ನು ಚಲಾಯಿಸಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.