ಹುಬ್ಬಳ್ಳಿ: ‘ವಿಧಾನ ಪರಿಷತ್ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಘೋಷಿಸಿಲ್ಲ. ಪಕ್ಷವನ್ನು ಸೇರುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ.
ಅವರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷರು ತೀರ್ಮಾನಿಸುತ್ತಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸೋಮವಾರ ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷದೊಳಗೆ ನಡೆದ ಆಂತರಿಕ ಚರ್ಚೆಯ ಕುರಿತು ಆಕಾಂಕ್ಷಿ ಮೋಹನ ಲಿಂಬಿಕಾಯಿ ಅವರು ಏನಾದರೂ ಹೇಳಿದ್ದರೆ, ಅದಕ್ಕೆ ಪ್ರತಿಕ್ರಿಯೆ ಕೊಡುವುದಿಲ್ಲ. ಪಕ್ಷದ ವ್ಯವಸ್ಥೆಯೊಳಗೆ, ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಕುರಿತು ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ತೀರ್ಮಾನ ಮಾಡುತ್ತಾರೆ’ ಎಂದರು.