ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಜನತಾ ಜಲಧಾರೆ ಸಮಾವೇಶದ ಮೂಲಕ ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿದೆ. ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಚರಿಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರ್ನಾಟಕ ಭೇಟಿ ಚುನಾವಣಾ ಸಿದ್ಧತೆಗೆ ಮುನ್ನುಡಿ ಎಂದೇ ಅರ್ಥೈಸಬಹುದು.
ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಹಾಗೂ ಸಿಎಂ ಆಗಿ ಬೊಮ್ಮಾಯಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜುಲೈ 28 ರಂದು ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಾಧನ ಸಮಾವೇಶವನ್ನು ಬಿಜೆಪಿ ಆಯೋಜಿಸಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಿಂದಾಗಿ ಸಮಾವೇಶ ರದ್ದಾಯಿತು. ಈ ಸಮಾವೇಶ ಕೂಡ ಮುಂಬರುವ ಚುನಾವಣೆಯ ತಾಲೀಮು ಅಂತಲೇ ಬಿಂಬಿಸಲಾಗಿತ್ತು.
ಮೊದಲು ಮೇಕೆದಾಟು ಪಾದಯಾತ್ರೆ ಮಾಡಿ ಚುನಾವಣಾ ರಾಜಕೀಯ ರಂಗು ಕೊಟ್ಟಿದ್ದೇ ಕಾಂಗ್ರೆಸ್. ನಂತರ ಜೆಡಿಎಸ್ ಕೂಡ ಜನತಾ ಜಲಧಾರೆ ಮೂಲಕ ದೊಡ್ಡ ಸಂಚಲನ ಉಂಟು ಮಾಡಿತ್ತು. ಈಗ ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ಜನತಾ ಮಿತ್ರ ವಿನೂತನ ಅಭಿಯಾನ ಆರಂಭಿಸಿದ್ದು, ಅದು ಮುಗಿಯುವ ಹಂತಕ್ಕೆ ಬಂದಿದೆ.
Laxmi News 24×7