ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಸರ್ವಋತು ಸಂಪರ್ಕ ರಸ್ತೆಗಳಾಗಿ ಅಭಿವೃದ್ಧಿಪಡಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಆದ್ಯತೆಯ ಮೇರೆಗೆ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲು ಘೋಷಣೆ ಮಾಡಲಾಗಿದ್ದು, ಆರ್ಡಿಪಿಆರ್ ಆಯುಕ್ತರು ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.