75ನೇ ವರ್ಷಕ್ಕೆ ಕಾಲಿಟ್ಟಿರುವ ಧಣಿವರಿಯದ ಧೀಮಂತ ನಾಯಕರು, ಶೈಕ್ಷಣಿಕ ಕ್ರಾಂತಿಯ ಹರಿಕಾರ, ಕೆಎಲ್ಇ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ್ ಕೋರೆ ಅವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭವನ್ನು ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಇದೇ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಾಹಿತಿ ನೀಡಿದ್ದಾರೆ.
ನಾಗನೂರು ರುದ್ರಾಕ್ಷಿ ಮಠದಲ್ಲಿ ಸೋಮವಾರ ಬೆಳಗಾವಿ ಜಿಲ್ಲೆಯ ಹಲವು ಮಠಾಧೀಶರ ಸಮ್ಮುಖದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಲ್ಇ ನಿರ್ದೇಶಕ ಮಹಾಂತೇಶ ಕವಟಗಿಮಠ ಅವರು ಇದೇ ನವೆಂಬರ್ 11ರಂದು ನಾಗನೂರು ರುದ್ರಾಕ್ಷಿ ಮಠದ ಆರ್.ಎಮ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಡಾ.ಪ್ರಭಾಕರ್ ಕೋರೆಯವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭ ಹಾಗೂ ಶಿಕ್ಷಣ ಸಂಸ್ಥೆಗಳು ಹಾಗೂ ಮಠಾಧಿಪತಿಗಳು ಎಂಬ ವಿಷಯದ ಮೇಲೆ ಮಠಾಧೀಶರ ಬೃಹತ್ ಚಿಂತನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ದಿವ್ಯ ಸನ್ನಿಧಾನವನ್ನು ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಿರಿಗೆರೆಯ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ. ಅದೇ ರೀತಿ ಸನ್ನಿದಾನವನ್ನು ಹುಬ್ಬಳ್ಳಿಯ ಮೂರು ಸಾವಿರ ಮಠದ ಡಾ.ಗುರುಶಿದ್ಧ ರಾಜಯೋಗಿಂದ್ರ ಮಹಾಸ್ವಾಮಿಗಳು, ಗದಗ-ಡಂಬಳದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು, ಮುಂಡರಗಿಯ ಡಾ.ಅನ್ನದಾನೇಶ್ವರ ಮಹಾಸ್ವಾಮಿಗಳು, ನಿಡಸೋಸಿಯ ಪಂಚಮಶಿವಲಿಂಗೇಶ್ವರ ಮಹಾಸ್ವಾಮಿಗಳು, ಶಿವಮೊಗ್ಗ ಆನಂದಪುರಂನ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಕೊಟ್ಟೂರಸ್ವಾಮಿ ಮಠದ ಕೊಟ್ಟುರು ಬಸವಲಿಂಗ ಮಹಾಸ್ವಾಮಿಗಳು ವಹಿಸಲಿದ್ದಾರೆ.