ಬೆಳಗಾವಿ: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಕೃತ್ಯಗಳು ನಡೆದ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ಬುಧವಾರ ಉದ್ಘಾಟಸಿ ಮಾತನಾಡಿದ ಅವರು,ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳ ಪೊಲೀಸರು ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಪೊಲೀಸ್ ಇಲಾಖೆ ಜನರ ಸಹಕಾರದಿಂದ ಶಾಂತಿ ಸುವ್ಯವಸ್ಥಿತ ಕಾಪಾಡಬೇಕು. ಪೊಲೀಸರಿಗೆ ಗಡಿ ಭಾಗದ ಸವಾಲುಗಳು ಭಿನ್ನವಾಗಿವೆ ಎಂದರು.
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆದ ಸಂದರ್ಭದಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ 24 ಗಂಟೆಯ ಒಳಗೆ ಅಪರಾಧಿಗಳನ್ನು ಬಂಧಿಸಿದ್ದಾರೆ. ದೇಶದಲ್ಲೇ ರಾಜ್ಯದ ಪೊಲೀಸರು ಉತ್ತಮ ಎನಿಸಿದ್ದಾರೆ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಈ ವರ್ಷವೇ 2500 ಮನೆಗಳು ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಸರ್ಕಾರದ ವತಿಯಿಂದ ಒಂದು 116 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗಿದೆ. ಎಲ್ಲಾ ಪೊಲೀಸ್ ಠಾಣಗಳು ಉದ್ಘಾಟನೆ ಹಂತದಲ್ಲಿ. ಪೊಲೀಸ್ ಸಾರಿಗೆ ವ್ಯವಸ್ಥೆ ಬಲಪಡಿಸಲು ರೂ.80 ಕೋಟಿಗಳನ್ನು ನೀಡಲಾಗಿದೆ. 300ಕ್ಕೂ ಅಧಿಕ ವಾಹನಗಳನ್ನು ಖರೀದಿ ಮಾಡಲಾಗಿದೆ. ವಿವಿಧ ಹಂತದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೂ ವಾಹನಗಳನ್ನು ಒದಗಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದರು.
ಡಿ.ವೈ.ಎಸ್ ಹಂತ ಅಧಿಕಾರಿಗಳಿಗೆ ಸ್ಕಾರ್ಪಿಯೋ ವಾಹನ ನೀಡಲಾಗುವುದು. ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ದಕ್ಷತೆ ಯಿಂದ ಕೆಲಸ ಮಾಡುತ್ತಿದೆ ಎಂದರು.