ಬೆಂಗಳೂರು: ರಾಜ್ಯದಲ್ಲಿ ಕನ್ನಡಕ್ಕೆ ಅಗ್ರಸ್ಥಾನ, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶ ಕಲ್ಪಿಸಲು ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ-2022’ ರೂಪಿಸುವ ಉದ್ದೇಶದಿಂದ ಸರ್ಕಾರ ಮಂಡಿಸಿದ ಮಸೂದೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರಗೊಂಡಿತು.
ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಮಸೂದೆಯನ್ನು ಮಂಡಿಸಿದರು. ಸೆಪ್ಟೆಂಬರ್ನಲ್ಲಿ ನಡೆದ ಅಧಿವೇಶನದಲ್ಲಿ ಇದೇ ಮಸೂದೆಯನ್ನು ಮಂಡಿಸಲಾಗಿತ್ತು. ಆಗ ಸಾರ್ವಜನಿಕ ವಲಯದಿಂದ ಕೆಲವು ಆಕ್ಷೇಪಣೆಗಳು, ಸಲಹೆಗಳು ಬಂದ ಕಾರಣ, ಅದರಲ್ಲಿನ ಕೆಲವು ಅಂಶಗಳನ್ನು ತಿದ್ದುಪಡಿ ಮಾಡಿ ಮತ್ತೆ ಮಂಡಿಸಲಾಯಿತು.
ಕರ್ನಾಟಕದಲ್ಲಿ ಅಥವಾ ಇತರ ಯಾವುದೇ ರಾಜ್ಯದಲ್ಲಿ ಕನ್ನಡ ಮಾಧ್ಯಮದಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗೆ ಓದಿದ
ವಿದ್ಯಾರ್ಥಿಗಳಿಗೆ ಉನ್ನತ, ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣದಲ್ಲಿ
ರಾಜ್ಯ ಸರ್ಕಾರ ಮೀಸಲಾತಿ ನೀಡಲು ಮಸೂದೆ ಅವಕಾಶ ಕಲ್ಪಿಸಲಿದೆ. ಅಲ್ಲದೆ, ರಾಜ್ಯ ಸರ್ಕಾರ ಅಥವಾ ಸರ್ಕಾರದ ಅಧೀನ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಕನ್ನಡ ಭಾಷಾ ಜ್ಞಾನ ಕಡ್ಡಾಯಗೊಳಿಸಲಿದೆ. ಕನ್ನಡವನ್ನು ಅಧಿಕೃತ ರಾಜ್ಯ ಭಾಷೆ ಎಂದು ತೀರ್ಮಾನಿಸುವ, ಸರ್ಕಾರದ ಎಲ್ಲ ವ್ಯವಹಾರಗಳಲ್ಲಿ,
ನ್ಯಾಯಾಲಯಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸುವ ಪ್ರಸ್ತಾವ ಮಸೂದೆಯಲ್ಲಿದೆ.
ಮಸೂದೆಯಲ್ಲಿರುವ ಅಂಶಗಳನ್ನು ಜಾರಿಗೊಳಿಸಲು ರಾಜ್ಯಮಟ್ಟದ ಸಮಿತಿ ರಚನೆಯಾಗಲಿದೆ. ಸಮಿತಿಯಲ್ಲಿ ಅಧಿಕಾರಿಗಳು ಮತ್ತು ಸಚಿವರು ಇರಲಿದ್ದಾರೆ. ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಈ ಸಮಿತಿಗೆ ಅಧಿಕಾರ ನೀಡಲಾಗಿದೆ. ಈ ಸಮಿತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಗಳು ಆಹ್ವಾನಿತ
ಸದಸ್ಯರಾಗಿರುತ್ತಾರೆ.
Laxmi News 24×7