ಬೆಂಗಳೂರು: ಮೇ 11 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಯನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.
ಪಟ್ಟಿ ಅಂತಿಮಗೊಳಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದಿದ್ದು ಬಹುಶಃ ಮೊದಲ ಪಟ್ಟಿಯನ್ನು ನಾಳೆ ಅಥವಾ ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ‘ಇದನ್ನು ಇಂದು ಸಂಜೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಆದರೆ ಹೆಚ್ಚಿನ ಚರ್ಚೆಗಳು ನಡೆಯಬೇಕಾಗಿರುವುದರಿಂದ ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಬಹುದು’ ಎಂದು ಬೊಮ್ಮಾಯಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಕೆಲವು ಅಭ್ಯರ್ಥಿಗಳಿಗೆ ಹೆಚ್ಚಿನ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಬೇಕಾಗಿದೆ, ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಬೇಕಾಗಿದೆ. ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಯಬೇಕಿದೆ’ ಎಂದು ಮುಖ್ಯಮಂತ್ರಿ ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು 224 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆಗೆ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆಯೊಳಗೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಆದರೆ, ಮಧ್ಯಾಹ್ನದ ನಂತರ, ಯಡಿಯೂರಪ್ಪ ‘ನಿನ್ನೆ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆಗಳು ನಡೆದಿವೆ. ಇಂದು ಮತ್ತೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೆಲವು ಸ್ಪಷ್ಟನೆಗಳಿಗಾಗಿ ನನ್ನನ್ನು ಕರೆದಿದ್ದರು, ನಾನು ಅವುಗಳನ್ನು ವಿವರಿಸಿದ್ದೇನೆ. ಅವರು ಇಂದು ಸಂಜೆ ಪಟ್ಟಿಯನ್ನು ಅನಾವರಣಗೊಳಿಸಬಹುದು ಎಂದು ಹೇಳಿದ್ದಾರೆ.
ಜೆಪಿ ನಡ್ಡಾ ಬೆಳಗ್ಗೆ ಕರೆದಿದ್ದ ಸಭೆಗೆ ಗೈರುಹಾಜರಾಗಿದ್ದರಿಂದ ನೀವು ಅತೃಪ್ತಿ ಹೊಂದಿದ್ದೀರಾ ಎಂಬ ಪ್ರಶ್ನೆ ಎದ್ದಿದ್ದು, ಯಡಿಯೂರಪ್ಪ ಅದನ್ನು ಅಲ್ಲಗಳೆದಿದ್ದಾರೆ. ‘ನಾನು ಏನೇ ಸಲಹೆಗಳನ್ನು ನೀಡಿದ್ದರೂ ಅವರು ಒಪ್ಪಿದ್ದಾರೆ, ನಾವು ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸಲಿದ್ದೇವೆ. ಅದರಲ್ಲಿ ಯಾವುದೇ ಸಂದೇಹವಿಲ್ಲ’ ಎಂದಿದ್ದಾರೆ.