ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಫೆ.5 ರವರೆಗೆ ನಡೆಯಲಿದೆ.
ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಅಧಿವೇಶನ ವೇದಿಕೆಯಾಗಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಜ.29ರಿಂದ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು, ಅಧಿವೇಶನ ನಡೆಯಲಿದ್ದು, ಅನುದಾನ ವಿಳಂಬದ ಬಗ್ಗೆ ಶಾಸಕರ ಅಪಸ್ವರ, ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಎರಡೂ ಸದನಗಳಲ್ಲಿ ಪ್ರತಿಧ್ವನಿಸಲಿದೆ. ವಿಧಾನಪರಿಷತ್ನಲ್ಲಿ ಗೋಹತ್ಯೆ ನಿಷೇಧವನ್ನು ಮತ್ತೆ ಸರ್ಕಾರ ಮಂಡಿಸುವ ಸಾಧ್ಯತೆಗಳಿವೆ.
ಸಚಿವ ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಬಿಕ್ಕಟ್ಟಿನ ಬೆನ್ನಲ್ಲೇ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರತಿಪಕ್ಷಗಳುವೊಡ್ಡುವ ಅಸ್ತ್ರಗಳನ್ನು ನೂತನ ಸಚಿವರು ಎದುರಿಸಲಿದ್ದಾರೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಶಾಸಕಾಂಗ ಸಭೆ: ನಾಳೆ ಬೆಳಿಗ್ಗೆ 9 ಗಂಟೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಸರ್ಕಾರ ವಿರುದ್ಧ ಯಾವೆಲ್ಲ ವಿಚಾರವನ್ನು ಎತ್ತಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.