ಜೋಯಿಡಾ: ತಾಲೂಕಿನ ಗುಂದ ಗ್ರಾಮದ ಬಳಿ ಮಂಗಳವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲಘಟಗಿಯಿಂದ ಉಳವಿ ದೇವಸ್ಥಾನಕ್ಕೆ ಭೇಟಿ ನೀಡಿ ಎರಡು ಬೈಕ್ಗಳಲ್ಲಿ ನಾಲ್ವರು ಸ್ನೇಹಿತರು ಹಿಂತಿರುಗುತ್ತಿದ್ದರು. ಈ ವೇಳೆ ಗುಂದ ರಸ್ತೆಯಲ್ಲಿ ಎದುರಿನಿಂದ ಬಂದ ಕ್ರೂಜರ್ ಟ್ರಾಕ್ಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ವಿನಾಯಕ ಮತ್ತು ಆಕಾಶ ಎಂದು ಗುರುತಿಸಲಾಗಿದೆ. ಇಬ್ಬರಿಗೂ ತೀವ್ರ ಸ್ವರೂಪದ ಪೆಟ್ಟಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣವೇ ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಗಾಯಾಳುಗಳ ಪೈಕಿ ಓರ್ವನ ತಲೆ ಹಾಗೂ ಕೈಗೆ ಗಂಭೀರ ಪೆಟ್ಟಾಗಿರುವುದರಿಂದ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Laxmi News 24×7