ಬೆಳಗಾವಿ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ನೀಡುವ ಮೂಲಕ ನಾಡಿಗೆ ಗೌರವ ಸಲ್ಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶಂಸಿಸಿದರು.
ಬೆಳಗಾವಿ ನಗರದ ಕೆಎಲ್ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಬುಧವಾರ ಪದ್ಮಶ್ರೀ ಪುರಸ್ಕೃತ ಡಾ.ಪ್ರಭಾಕರ ಕೋರೆ ಅವರನ್ನು ಸತ್ಕರಿಸಿ ಮಾತನಾಡಿದ ಅವರು, ಡಾ.ಕೋರೆ ಸೇವೆ ಅಪಾರ. ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಅವರು ಅದ್ವಿತೀಯ ಕೊಡುಗೆ ನೀಡಿದ್ದಾರೆ. ಅವರ ಸಮಾಜಮುಖಿ ಸೇವೆಗೆ ಬೆಲೆಕಟ್ಟಲಾಗದು. ಅವರಿಗೆ ಪದ್ಮಶ್ರೀ ಗೌರವ ಸಂದಿರುವುದು ಹೆಮ್ಮೆ ತಂದಿದೆ ಎಂದರು.
ಡಾ.ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು ಕೇವಲ ಜಿಲ್ಲೆಗೆ, ಕೆಎಲ್ಇ ಸಂಸ್ಥೆಗಲ್ಲ. ಅದು ನಾಡಿಗೆ ಸಂದ ಗೌರವಾಗಿದೆ. ಅವರ ಸಾಧನೆ ನಮಗೆಲ್ಲಾ ಪ್ರೇರಣೆಯಾಗಿದೆ ಎಂದರು. ವಿಧಾನ ಪರಿಷತ್ನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ಅನಿಲ ಬೆನಕೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ವಿರೂಪಾಕ್ಷ ಮಾಮನಿ, ಡಾ.ರವಿ ಪಾಟೀಲ ಇತರರಿದ್ದರು.
Laxmi News 24×7