Breaking News
Home / ಜಿಲ್ಲೆ / ಗ್ರಾಮ ವಾಸ್ತವ್ಯ: ಬೈಲವಾಡದಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡ ಗ್ರಾಮಸ್ಥರು, ಜನರ ಮನವಿಗಳಿಗೆ ಕಿವಿಯಾದ ಅಧಿಕಾರಿಗಳು

ಗ್ರಾಮ ವಾಸ್ತವ್ಯ: ಬೈಲವಾಡದಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡ ಗ್ರಾಮಸ್ಥರು, ಜನರ ಮನವಿಗಳಿಗೆ ಕಿವಿಯಾದ ಅಧಿಕಾರಿಗಳು

Spread the love

ಬೆಳಗಾವಿ: ‘ಅಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ.

ಸರ್ಕಾರಿ ಬಸ್ ನಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದರು. ಗ್ರಾಮಸ್ಥರು ಜಿಲ್ಲಾಧಿಕಾರಿ ಸೇರಿ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡರು.

ಗ್ರಾಮದ ವರ್ತಿ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿದ್ದಾರೆ. ₹ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನನ ನೂತನ‌ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಿದರು. ಶಾಸಕ ಮಹಾಂತೇಶ ಕೌಜಲಗಿ ಉಪಸ್ಥಿತರಿದ್ದರು.

ಬಳಿಕ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ವಸತಿನಿಲಯದ ಊಟದ ಕೋಣೆಯಲ್ಲಿ ಶಾಸಕ ಮಹಾಂತೇಶ ಕೌಜಲಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೇರಿದಂತೆ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆಗೆ ಉಪಾಹಾರ ಸೇವಿಸಿದರು.

ಗ್ರಾಮದ ಸಿ.ಆರ್.ಪಿ.ಎಫ್. ಹುತಾತ್ಮ ಯೋಧ ಮಂಜುನಾಥ ಮುದುಕನಗೌಡರ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಹಿರೇಮಠ ಮಾಲಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮಾಲಾರ್ಪಣೆ ಮಾಡಿ ಗ್ರಾಮಕ್ಕೆ ಬರಮಾಡಿಕೊಂಡರು.

ಅಲ್ಲಿಂದ ಗ್ರಾಮ ಪ್ರದಕ್ಷಿಣೆ ಆರಂಭಿಸಿದ ಅವರು ಮೊದಲಿಗೆ ಪರಿಶಿಷ್ಟರ ಕಾಲೊನಿಗೆ ಭೇಟಿ ನೀಡಿದರು. ಇದೇ ವೇಳೆ ಕರಿಯಮ್ಮ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಗ್ರಾಮಸ್ಥರ ಮನವಿ ಆಲಿಸಿದ ಜಿಲ್ಲಾಧಿಕಾರಿ:
ತಂದೆಯನ್ನು ಕಳೆದುಕೊಂಡಿದ್ದು ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ, ವಿದ್ಯಾಭ್ಯಾಸದ ಖರ್ಚು ಭರಿಸಲು ಸಾಧ್ಯವಾಗುತ್ತಿಲ್ಲ ಎಂದು ಮೂರನೇ ತರಗತಿಯ ಬಾಲಕ ಜಿಲ್ಲಾಧಿಕಾರಿಗಳಿಗೆ ಕೈ ಬರಹದಲ್ಲಿ ಮನವಿ ಸಲ್ಲಿಸಿದ. ಬಾಲಕನ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು‌ ಭರವಸೆ ನೀಡಿದರು.

ಸ್ವಾತಂತ್ರ್ಯ ಯೋಧರ ಪಿಂಚಣಿ, ವಿದ್ಯುತ್ ಕಂಬ ತೆರವು, ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಗ್ರಾಮದ ಜನರು ಮನವಿ ಮಾಡಿದರು. ಬಳಿಕ ಗ್ರಾಮ ಪಂಚಾಯ್ತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಚನ್ನನಸಪ್ಪ ಕೊಡ್ಲಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಸೇರಿದಂತೆ ಇನ್ನಿತರ ಇಲಾಖೆಯ ಅಧಿಕಾರಿಗಳು ಇದ್ದರು.


Spread the love

About Laxminews 24x7

Check Also

ಡ್ರೈವಿಂಗ್‌ ಲೈಸೆನ್ಸ್‌; ಜೂನ್‌ 1ರಿಂದ ಹೊಸ ರೂಲ್ಸ್‌!

Spread the love ಇನ್ನು ಮುಂದೆ ಚಾಲನಾ ಪರವಾನಗಿ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಬೇಕಿಲ್ಲ. ಬದಲಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ