ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ನೇತೃತ್ವದಲ್ಲಿ ರೈತರು ಮತ್ತು ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ವ್ಯಾಪಕ ಪ್ರತಿರೋಧ ನಡೆಯೂ ರಾಜ್ಯ ಸರ್ಕಾರವು ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುತ್ತಿರುವುದು ರೈತರ ಮರಣ ಶಾಸನ ಬರೆದಂತಾಗಿದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು. ಕೊರೊನಾ ವೈರಸ್ ಎಲ್ಲೆಡೆ ವ್ಯಾಪಿಸುತ್ತಿದ್ದು, ಹಳ್ಳಿಗಳಲ್ಲಿ ಆಹಾರ, ಆರೋಗ್ಯ ಹಾಗೂ ಶಿಕ್ಷಣದಲ್ಲಿ ಕೊರತೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಳಪೆ ಸೋಯಾಬೀನ್ ಬಿತ್ತನೆ ಬೀಜದಿಂದ ಅಪಾರ ನಷ್ಟ ಸಂಭವಿಸಿದ್ದು, ರೈತರಿಗೆ ಕೂಡಲೇ ಸೂಕ್ತ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು. ಮುಂಗಾರು ಹಂಗಾಮಿನಲ್ಲಿ ರೈತರ ಆಸ್ತಿ ಮತ್ತು ಬೆಳೆಗೆ ಹಾನಿಯಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ರೈತರ ಯಾವುದೇ ಸಾಲವನ್ನೂ ಒಟಿಎಸ್ (ಒನ್ ಟೈಂ ಸೆಟ್ಲ್ಮೆಂಟ್) ಯೋಜನೆಯಲ್ಲಿ ಅಳವಡಿಸಬಾರದು. ರಾಜ್ಯ ಸರ್ಕಾರದ ಹಿಂದಿನ ಆದೇಶದ ಪ್ರಕಾರ, ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ನಿರ್ದೇಶನಾಲಯದ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಸಂಘಟನೆ ಅಧ್ಯಕ್ಷ ಸಿದಗೌಡ ಮೋದಗಿ, ಜಿಲ್ಲಾ ಘಟಕದ ಅಧ್ಯಕ್ಷ ಜೀವಪ್ಪ ಧರೆಣ್ಣವರ ನೇತೃತ್ವ ವಹಿಸಿದ್ದರು.