ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ ಪಟ್ಟಣದ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದೆ. ಪಾರ್ಥಿವ ಶರೀರವನ್ನು ಸಿಂದಗಿಗೆ ತೆಗೆದುಕೊಂಡು ಬರಲಾಗುತ್ತಿದೆ. ಅವರಿಗೆ ಇಬ್ಬರು ಪುತ್ರರು ಇದ್ದಾರೆ.
ಎರಡು ಬಾರಿ ಸಚಿವ: ಮನಗೂಳಿ ಅವರು ಜೆಡಿಎಸ್ ನಿಂದ ಒಟ್ಟು ಏಳು ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಎರಡೂ ಬಾರಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
1994ರಲ್ಲಿ ಮೊದಲ ಬಾರಿ ಶಾಸಕರಾಗಿದ್ದಾಗ ಜೆ.ಎಚ್. ಪಟೇಲ್ ಸರ್ಕಾರದ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. 2018 ರ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದಾಗ ಎಚ್.ಡಿ. ಕುಮಾರಸ್ವಾಮಿ ಅವರ ಸಂಪುಟದಲ್ಲಿ ತೋಟಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ದೇವೇಗೌಡ ಅವರೊಂದಿಗೆ ಆತ್ಮೀಯತೆ ಹೊಂದಿದ್ದ ಅವರು, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದರು. “ಜೀವ ಇರೋವರೆಗೂ ಜೆಡಿಎಸ್ ಬಿಡುವುದಿಲ್ಲ” ಎನ್ನುತ್ತಿದ್ದರು.
ಸಿಂದಗಿ ಕ್ಷೇತ್ರದಲ್ಲಿ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗಾಗಿ ಎಂ.ಸಿ.ಮನಗೂಳಿ ಸಾಕಷ್ಟು ಶ್ರಮ ವಹಿಸಿದ್ದರು. ಅವರ ಹೋರಾಟದ ಫಲವಾಗಿ ಯೋಜನೆ ಜಾರಿಯಾಗಿತ್ತು. ನೀರಾವರಿ ಯೋಜನೆ ಅನುಷ್ಠಾನ ಮಾಡಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಕ್ಷೇತ್ರದ ಗೋಲಗೇರಿಯಲ್ಲಿ ಮನಗೂಳಿ ಮತ್ತು ದೇವೇಗೌಡರ ಕಂಚಿನ ಪ್ರತಿಮೆ ಸ್ಥಾಪಿಸಿದ್ದಾರೆ.
ಗಣ್ಯರ ಸಂತಾಪ: ಮನಗೂಳಿ ಅವರ ನಿಧನಕ್ಕೆ ರಾಜ್ಯದ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ವಿವಿಧ ಮಠಾಧೀಶರು ಕಂಬನಿ ಮಿಡಿದಿದ್ದಾರೆ.