ಶಿವಮೊಗ್ಗ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ತಾಲೂಕಿನ ಹಸೂಡಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪನ್ನು ಜಿಲ್ಲಾಡಳಿತ ಕಂಟೈನ್ಮೆಂಟ್ ವಲಯ ಎಂದು ಘೋಷಿಸಿ ಸೀಲ್ಡೌನ್ ಮಾಡಿದೆ. ಕಳೆದ 4 ದಿನಗಳ ಹಿಂದೆ ಪಂಜಾಬ್ ನಿಂದ ಆಗಮಿಸಿದ್ದ ಹಸೂಡಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪ್ ನ ಮೂವರಿಗೆ ಕೊರೊನಾ ಪಾಸಿಟಿವ್ ಕಾಣಿಸಿತ್ತು. ಹಾಗಾಗಿ ಆ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿತ್ತು.
ಹೀಗಾಗಿ ಗ್ರಾಮಸ್ಥರು ಮನೆಯಿಂದ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಗ್ರಾಮಸ್ಥರಿಗೆ ಮನವಿ ಸಹ ಮಾಡಿದೆ. ಹೀಗಿದ್ದರೂ ಜಿಲ್ಲಾಡಳಿತ ಮನವಿ ಧಿಕ್ಕರಿಸಿ ಹಕ್ಕಿಪಿಕ್ಕಿ ಕ್ಯಾಂಪಿನ ಜನರು ಪಕ್ಕದ ಚಿಕ್ಕಮರಡಿ ಗ್ರಾಮದ ಮೂಲಕ ಕಳ್ಳದಾರಿಯಲ್ಲಿ ಓಡಾಟ ನಡೆಸುತ್ತಿದ್ದರು. ಇದನ್ನು ಗಮನಿಸಿದ್ದ ಪಕ್ಕದ ಗ್ರಾಮಸ್ಥರು ನಮ್ಮ ಗ್ರಾಮದ ಕಡೆ ಬರಬೇಡಿ ಎಂದು ಹೇಳಿದ್ದಾರೆ. ಇದನ್ನೇ ತಪ್ಪು ಎಂದು ಭಾವಿಸಿದ ಹಕ್ಕಿಪಿಕ್ಕಿ ಕ್ಯಾಂಪಿನ ನೂರಾರು ಮಂದಿ ಚಿಕ್ಕಮರಡಿ ಗ್ರಾಮದವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಘಟನೆಯಲ್ಲಿ ಹಲವು ಮನೆಗಳು ಹಾಗೂ ವಾಹನಗಳು ಜಖಂಗೊಂಡಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಗ್ರಾಮಾಂತರ ಠಾಣೆ ಪೊಲೀಸರು ದೌಡಾಯಿದ್ದು, ಪ್ರಕರಣ ದಾಖಲಿಸಿಕೊಂಡು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.