ಬೆಂಗಳೂರು, ಮೇ 5- ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬಹು ನಿರೀಕ್ಷಿತ ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿ ಜೂನ್ ಎರಡನೆ ಅಥವಾ ಮೂರನೆ ವಾರದಲ್ಲಿ ಪ್ರಕಟವಾಗಲಿದ್ದು, ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಎಲ್ಲಿ ಬಯಸುತ್ತಾರೋ ಅದೇ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ನೀಡಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಜೂನ್ ತಿಂಗಳ ಎರಡನೆ ಅಥವಾ ಮೂರನೆ ವಾರದಲ್ಲಿ ಪ್ರಕಟಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದ್ದಾರೆ.
ತಮ್ಮ ಅಧಿಕೃತ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಲ್ಲವೆ ಪೊಷಕರು ವೇಳಾಪಟ್ಟಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಶಿಕ್ಷಣ ಇಲಾಖೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಪರೀಕ್ಷಾ ಕೇಂದ್ರಗಳಿಗೆ ಬರುವ ಪ್ರತಿಯೊಬ್ಬರೂ (ವಿದ್ಯಾರ್ಥಿಗಳು ಸೇರಿದಂತೆ) ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಉಷ್ಣಾಂಶ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು.
ಎಲ್ಲವೂ ನಿರೀಕ್ಷೆಯಂತೆ ನಡೆದರೆ ಜೂನ್ ತಿಂಗಳಿನಲ್ಲಿ ಲಾಕ್ಡೌನ್ ಇನ್ನಷ್ಟು ಸಡಿಲಿಕೆಯಾಗುವ ಸಂಭವವಿದೆ. ವೇಳಾಪಟ್ಟಿಯನ್ನು 10 ರಿಂದ 15 ದಿನ ಮುಂಚಿತವಾಗಿಯೇ ಪ್ರಕಟಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಶಿಕ್ಷಣ ಇಲಾಖೆ ಪ್ರಕಟಿಸುವ ವೇಳಾಪಟ್ಟಿಯೇ ಅಂತಿಮ.
ಉಳಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಸುದ್ದಿಗಳು ಪ್ರಕಟವಾದರೆ ಪೆಪೊಷಕರು ನಂಬಬಾರದು. ಒಂದು ವೇಳೆ ನಿಮಗೆ ಗೊಂದಲವಾದರೆ ಇಲಾಖೆಯ ಸಹಾಯವಾಣಿಗೆ ದೂರವಾಣಿ ಕರೆ ಮಾಡಿ ಸ್ಪಷ್ಟನೆ ತಿಳಿದುಕೊಳ್ಳಬೇಕೆಂದು ಸುರೇಶ್ಕುಮಾರ್ ಮನವಿ ಮಾಡಿದರು.
ಪರೀಕ್ಷೆ ಮುಂದೂಡಿಕೆಯಾಗಿರುವುದರಿಂದ ಹಾಸ್ಟೆಲ್ ಹಾಗೂ ಬೇರೆ ಬೇರೆ ಊರುಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಈಗ ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳಿದ್ದಾರೆ. ನಿನ್ನೆ ರಾಜ್ಯದ ಎಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಜತೆ ಪರೀಕ್ಷಾ ಸಿದ್ಧತೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಇಲಾಖೆಯು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಶಿಕ್ಷಣ ಸಚಿವರ ಜತೆಯೂ ಮಾತುಕತೆ ನಡೆಸಲಾಗಿದೆ. ಮೂರ್ನಾಲ್ಕು ರಾಜ್ಯ ಹೊರತುಪಡಿಸಿದರೆ ಜೂನ್ ತಿಂಗಳ ಮಧ್ಯ ಭಾಗದಲ್ಲಿ ಪರೀಕ್ಷೆ ನಡೆಸಲು ಒಲವು ತೋರಿದ್ದಾರೆ ಎಂದು ತಿಳಿಸಲಾಗಿದೆ. ಪರೀಕ್ಷೆ ಮುಂದೂಡಿಕೆಯಾಗುತ್ತಿರುವುದಕ್ಕೂ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ.
ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ದೂರದರ್ಶನದ ಚಂದನ ವಾಹಿನಿಯಲ್ಲಿ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳನ್ನು ಆರಂಭಿಸಿದ್ದೇವೆ. ಈಗಾಗಲೇ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೂ ಪ್ರಾರಂಭಿಸುತ್ತೇವೆ ಎಂದು ಹೇಳಿದರು.
ಒಂದರಿಂದ ಒಂಬತ್ತನೆ ತರಗತಿಯವರೆಗೆ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿದ್ದೇವೆ. ಇದೇ ರೀತಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸದೆ ಉತ್ತೀರ್ಣ ಮಾಡಬೇಕೇ ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಲಾಯಿತು.
ಶೇ.99ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ನಡೆಸಬೇಕೆಂದು ಮನವಿ ಮಾಡಿದರು. ನಾವು ಒಂದು ವರ್ಷ ಪಟ್ಟ ಪರಿಶ್ರಮಕ್ಕೆ ಫಲ ಸಿಗಬೇಕೆಂದರೆ ಪರೀಕ್ಷೆ ಮಾಡಲೇಬೇಕು. ಒಂದು ವೇಳೆ ಹಾಗೆಯೇ ಉತ್ತೀರ್ಣರಾದರೆ ನಮ್ಮನ್ನು ಕೊರೊನಾದಿಂದ ಉತ್ತೀರ್ಣರಾದರು ಎಂದು ಟೀಕೆ ಮಾಡುತ್ತಾರೆ. ಹೀಗಾಗಿ ಪರೀಕ್ಷೆ ನಡೆಸಬೇಕೆಂದು ವಿದ್ಯಾರ್ಥಿಗಳು ಮನವಿ ಮಾಡಿದ್ದರಿಂದ ಇಲಾಖೆ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಿದರು.