ಬಾಗಲಕೋಟೆ: ನೀತಿ ಸಂಹಿತೆ ಪಾಲನೆ ಜೊತೆಗೆ ಅಧಿಕಾರಿಗಳು ಪಕ್ಷಾತೀತವಾಗಿ ಚುನಾವಣೆ ಕಾರ್ಯವನ್ನು ಪ್ರಾಮಾಣಿಕರಾಗಿ ನಿರ್ವಹಿಸಬೇಕು ಎಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಸಾಮಾನ್ಯ ವೀಕ್ಷಕರಾದ ಪಾರುಲ್ ಪಟವಾರಿ ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಅಬಕಾರಿ ಡಿಸ್ಟಲರಿ ಉತ್ಪನ್ನಗಳ ಹಾಗೂ ಹೊರ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಹೇಳಿದರು.
ವಿವಿಧ ನೋಡಲ್ ಅಧಿಕಾರಿಗಳ ಕಾರ್ಯ, ಮಾದರಿ ನೀತಿ ಸಂಹಿತೆ ಜಾರಿಗೆ ಸಂಬಂಧಿಸಿದ ಕ್ರಮಗಳು, ಮತದಾರರ ಸೌಲಭ್ಯಗಳು ಹಾಗೂ ಮತಟ್ಟೆಗಳಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಿದರು. ಎಲ್ಲ ನೋಡಲ್ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಸೂಚಿಸಿದರು.
ಈವರೆಗೆ ಕೈಗೊಂಡ ಚುನಾವಣಾ ಪೂರ್ವ ಸಿದ್ದತೆ, ಮಾದರಿ ನೀತಿ ಸಂಹಿತೆ, ಕಾನೂನು ಸುವ್ಯಸ್ಥೆ, ಮತಯಂತ್ರಗಳ ಪೂರ್ವಸಿದ್ದತೆ, ಮತದಾರರ ಪಟ್ಟಿ ಪರಿಷ್ಕರಣೆ, ಮತಗಟ್ಟೆ ಸಿಬ್ಬಂದಿ ನಿಯೋಜನೆ, ಜಾಗೃತ ದಳದ ತಂಡಗಳ ನಿರ್ವಹಣೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಪೇಡ್ ನ್ಯೂಸ್, ಸೋಷಿಯಲ್ ಮಿಡಿಯಾ, ಟಿವಿಗಳಲ್ಲಿ ಹಾಗೂ ಜಾಹೀರಾತುಗಳ ಮೇಲೆ ನಿಗಾವಹಿಸಿರಿ. ತಪ್ಪುಗಳು ಕಂಡು ಬಂದರೆ ವೆಚ್ಚ ವೀಕ್ಷಕರ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಉಪಚುನಾವಣೆಗೆ ಸಂಬಂಧಿಸಿದ 319 ಮತಗಟ್ಟೆ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಚುನಾವಣಾ ಸಿಬ್ಬಂದಿಗೆ ತರಬೇತಿ ಕೊಡಲಾಗಿದೆ. ಚುನಾವಣಾ ಅಕ್ರಮ ತಡೆಗೆ 24 ಚೆಕ್ ಪೋಸ್ಟ್ಗಳನ್ನು ಹಾಗೂ 72 ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳನ್ನು ರಚಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸದಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ನೀತಿ ಸಂಹಿತೆ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ತಿಳಿಸಿದರು.
ವಿಶೇಷ ಮತಗಟ್ಟೆಗಳ ಸ್ಥಾಪನೆ ಬಗ್ಗೆ ಕ್ರಮೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಎಂಸಿಸಿ ನೋಡಲ್ ಅಧಿಕಾರಿ ಶಶಿಧರ ಕುರೇರ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ ಇದ್ದರು.
Laxmi News 24×7