ಚಿತ್ರದುರ್ಗ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾವನನ್ನು ನಾದಿನಿಯೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದಿರುವ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಮೃತರನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮದ ನಿವಾಸಿ ಶಿವಮೂರ್ತಿ (49) ಎಂದು ಗುರುತಿಸಲಾಗಿದೆ. ಶಿವಮೂರ್ತಿ ಪಾವಗಡದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ರಜೆ ದಿನಗಳಲ್ಲಿ ಕಾರು ಚಾಲಕರಾಗಿಯೂ ಕೆಲಸ ಮಾಡುತ್ತಿದ್ದರು.
ಜೂನ್ 26ರಂದು ಕಾರು ಬಾಡಿಗೆ ನೆಪದಲ್ಲಿ ಆರೋಪಿಗಳು ಶಿವಮೂರ್ತಿಯನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿಗೆ ಕರೆಸಿಕೊಂಡಿದ್ದರು. ಬಳಿಕ ಪೂರ್ವನಿಯೋಜಿತ ಸಂಚಿನಂತೆ ಶಿವಮೂರ್ತಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ. ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವವನ್ನು ಚಿತ್ರದುರ್ಗ ತಾಲೂಕಿನ ಇಂಗಳದಾಳ್ ಗ್ರಾಮದ ಸಮೀಪಕ್ಕೆ ತಂದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.
ಪ್ರಕರಣ ಏನು?
ಜುಲೈ 1ರಂದು ಇಂಗಳದಾಳ್ (Ingaladal) ಗ್ರಾಮದ ಬಳಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಶಿವಮೂರ್ತಿ ಅವರ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ತನಿಖೆ ನಡೆಸಿ ಕೊಲೆಯ ಹಿಂದಿನ ಸಂಚನ್ನು ಬಯಲಿಗೆಳೆದಿದ್ದಾರೆ.
ತನಿಖೆಯಲ್ಲಿ ಶಿವಮೂರ್ತಿ ಅವರ ಸಹೋದರನ ಪತ್ನಿ ಸುಮತಿ ಹಾಗೂ ಆಕೆಯ ಪ್ರಿಯಕರ ನೂರ್ ಅಹ್ಮದ್ ನಡುವೆ ಅಕ್ರಮ ಸಂಬಂಧವಿದ್ದದ್ದು ಬೆಳಕಿಗೆ ಬಂದಿದೆ. ಈ ಸಂಬಂಧಕ್ಕೆ ಶಿವಮೂರ್ತಿ ವಿರೋಧ ವ್ಯಕ್ತಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಹತ್ಯೆ ಮಾಡಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಶಿವಮೂರ್ತಿ ಅವರ ನಾದಿನಿ ಸುಮತಿ, ನೂರ್ ಅಹ್ಮದ್, ಅಕ್ಷಯ್ ಹಾಗೂ ಜೇಂಕಾರ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಪೂರ್ವನಿಯೋಜಿತವಾಗಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
Laxmi News 24×7