ಹೊಸದಿಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದಿದ್ದಾರೆ. ದೇಶದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಾಗಿನಿಂದಲೂ ಜನರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕಾಂಗ್ರೆಸ್ ಒತ್ತಡ ಹೇರುತ್ತಿತ್ತು. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಎಲ್ಲಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ತಮ್ಮ ಬೆಂಬಲ ವ್ಯಕ್ತಪಡಿಸಿದ್ದು, ಆತ್ಮೀಯ ಪ್ರಧಾನಿ, ಕೊರೊನಾ ವೈರಸ್ ವಿರುದ್ಧ ಹೋರಾಡುವ ಕ್ರಮವಾಗಿ ನೀವು ಘೋಷಿಸಿದ 21 ದಿನಗಳ ‘ರಾಷ್ಟ್ರವ್ಯಾಪಿ ಲಾಕ್ಡೌನ್’ ಸ್ವಾಗತಾರ್ಹ ಹೆಜ್ಜೆಯಾಗಿದೆ. ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಹಾಗೂ ಸಹಕರಿಸುತ್ತೇವೆ ಎಂದು ಹೇಳಿದ್ದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅಕ್ಕಿ ಯೋಜನೆ ಅಡಿ ಈಗಾಗಲೇ 5 ಕೆಜಿ ಅಕ್ಕಿ/ ಗೋಧಿ ನೀಡಲಾಗುತ್ತಿದೆ. ಇದರ ಜೊತೆ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ವಲಸೆ ಕಾರ್ಮಿಕರು, ನಗರ ಮತ್ತು ಗ್ರಾಮೀಣ ಬಡವವರಿಗೆ, ತಕ್ಷಣದ ಸಹಾಯದ ಅಗತ್ಯವಿರುವ ಬಡವರಿಗೆ ಪ್ಯಾಕೇಜ್ ಸಿದ್ಧವಾಗಿದೆ. ಯಾರೂ ಹಸಿವಿನಿಂದ ಬಳಲಬಾರದು ಎನ್ನುವುದು ನಮ್ಮ ಸರ್ಕಾರ ಉದ್ದೇಶ. ಹೀಗಾಗಿ 1.7 ಲಕ್ಷ ಕೋಟಿ ರೂ. ಮೌಲ್ಯದ ಪ್ಯಾಕೇಜ್ ಘೋಷಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.8.69 ಕೋಟಿ ರೂ. ರೈತರ ಖಾತೆಗೆ ಈ ಕೂಡಲೇ ಏಪ್ರಿಲ್ ತಿಂಗಳ 2 ಸಾವಿರ ರೂ. ಹಣವನ್ನು ಹಾಕಲಾಗುವುದು. ನರೇಗಾ ಯೋಜನೆ ಅಡಿ ಕೆಲಸ ಮಾಡುವ ಪ್ರತಿ ಕಾರ್ಮಿಕರಿಗೆ 2 ಸಾವಿರ ರೂ. ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಕೇಂದ್ತ ಸರ್ಕಾರ ಘೋಷಣೆ ಮಾಡಿದೆ.