ಚಾಮರಾಜನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಆದರೆ ಇದೀಗ ಜಿಲ್ಲೆಯಲ್ಲಿ ಸಚಿವ ಮತ್ತು ಶಾಸಕರು ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಮತ್ತು ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಇಬ್ಬರು ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಜಿಲ್ಲಾ ರೈತ ಸಂಘದಿಂದ ಎಸ್ಪಿಗೆ ಇವರ ವಿರುದ್ಧ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ?
ನೂರಾರು ಬೆಂಬಲಿಗರೊಂದಿಗೆ ಬಡಜನರು ನೆಲೆಸಿರುವ ಕಡೆ ದಿನಸಿ ಪದಾರ್ಥಗಳನ್ನು ವಿತರಣೆ ಮಾಡುವ ನೆಪದಲ್ಲಿ ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ, ರಾಜಕೀಯ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ 144 ಸೆಕ್ಷನ್ ಮತ್ತು ಲಾಕ್ಡೌನ್ ಉಲ್ಲಂಘನೆ ಮಾಡಿ, ಮಾಸ್ಕ್ ಇನ್ನಿತರ ಸುರಕ್ಷತಾ ಕ್ರಮಗಳನ್ನು ಸರಿಯಾಗಿ ಅನುಸರಿಸದೆ ನಿರ್ಲಕ್ಷದಿಂದ ಕೊರೊನಾ ಸೋಂಕು ಹರಡಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಷ್ಟೇ ಅಲ್ಲದೇ ಇಂತಹ ಸಂದರ್ಭವನ್ನು ದುರುಪಯೋಗಪಡಿಸಿಕೊಳ್ಳತ್ತಿರುವ ನಿರಂಜನ್ ಕುಮಾರ್ ಮತ್ತು ಸುರೇಶ್ ಕುಮಾರ್ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಚಾಮರಾಜನಗರ ಜಿಲ್ಲಾ ರೈತ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಳಿ ಮನವಿ ಮಾಡಿಕೊಂಡಿದ್ದಾರೆ.