ಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ ಸಕಾಲದಲ್ಲಿ ನ್ಯಾಯ ಒದಗಿಸುವುದು ಪೊಲೀಸರ ಆದ್ಯ ಕರ್ತವ್ಯವಾಗಿದೆ, ಇದನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಬೆಂಗಳೂರು, ಗೃಹ ಇಲಾಖೆ, ಬೆಂಗಳೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು, ಇವರ ಸಹಯೋಗದಲ್ಲಿ ವಿಕಾಸ ಸೌಧದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ “ಮಕ್ಕಳ ಹಕ್ಕುಗಳ ರಕ್ಷಣೆ”ಯ ಕುರಿತು ಬೆಂಗಳೂರು ನಗರದ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಠಾಣೆಗಳ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ರಕ್ಷಣೆ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಪ್ರಶಂಸನೀಯ, ಪೊಲೀಸ್ ಇಲಾಖಾ ಅಧಿಕಾರಿಗಳು ತರಬೇತಿ ಕಾರ್ಯಗಾರದ ಸದುಪಯೋಗ ಪಡೆದುಕೊಂಡು, ಮಕ್ಕಳ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ತಿಳಿಸಿದರು.
ತುರ್ತು ಪೊಲೀಸ್ ಸಹಾಯವಾಣಿ 112 ರಿಂದ ಶೇಕಡಾ 9 ರಷ್ಟು ಅಪರಾಧ ಪ್ರಕರಣಗಳು ಕಡಿಮೆಯಾಗಿರುವುದು ಸಂತೋಷದ ವಿಷಯ. ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು, ಮಕ್ಕಳ ಕಲ್ಯಾಣ ಸಮಿತಿಗಳು, ಬಾಲನ್ಯಾಯ ಮಂಡಳಿ, ಸ್ವಯಂ ಸೇವಾ ಸಂಸ್ಥೆಗಳನ್ನು ಒಗ್ಗೂಡಿಸಿಕೊಂಡು ಬೆಂಗಳೂರು ನಗರವನ್ನು ಮಕ್ಕಳಿಗೆ ಸುರಕ್ಷಿತ ತಾಣವಾಗಿ ಸೃಷ್ಟಿಸಲು ಕ್ರಮವಹಿಸಲು ಮುಂದಾಗೋಣ ಎಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಭೂಮಿಯ ಮೇಲಿನ ಪ್ರತಿಯೊಂದು ಮಗುವಿನ ರಕ್ಷಣೆಗಾಗಿ ವಿಶ್ವಸಂಸ್ಥೆಯು 1989 ನವೆಂಬರ್ 20 ರಂದು ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು ಜಾರಿಗೆ ತಂದಿದ್ದು, ಭಾರತವು 1992 ಡಿಸೆಂಬರ್ 11 ರಂದು ಸಮ್ಮತಿಯಿಂದ ಸಹಿ ಮಾಡಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 196 ದೇಶಗಳು ಒಮ್ಮತದಿಂದ ಒಪ್ಪಿಯ ಸಹಿ ಮಾಡಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು ರಾಷ್ಟ್ರಗಳು ಸಹಿ ಮಾಡಿದ ಏಕೈಕ ಒಡಂಬಡಿಕೆಯಾಗಿದೆ ಎಂದು ತಿಳಿಸಿದರು.
ಮಕ್ಕಳ ಅಪಹರಣ ಪ್ರಕರಣ, ಪೋಕ್ಸೋ ಪ್ರಕರಣ, ಬಾಲ್ಯ ವಿವಾಹ ಪ್ರಕರಣ ಸೇರಿದಂತೆ ಮಕ್ಕಳ ಹಕ್ಕುಗಳ ಉಲ್ಲಂಘನೆ ವಿಷಯಕ್ಕೆ ಸಂಬಂಧಿತ ಪ್ರಕರಣಗಳನ್ನು ಪೊಲೀಸ್ ಅಧಿಕಾರಿಗಳು ಸಕಾಲದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಮಕ್ಕಳ ನ್ಯಾಯ ( ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ-2015, ಕಲಂ 107 ಹಾಗೂ ಮಕ್ಕಳ ನ್ಯಾಯ ( ಮಕ್ಕಳ ರಕ್ಷಣೆ ಮತ್ತು ಪೋಷಣೆ) ಮಾದರಿ ನಿಯಮ -2016 ರ 8(6) ಹಾಗೂ 86(11) ಅನ್ವಯ ಪದನಿಮಿತ್ತ ಅಧಿಕಾರಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆಗಳನ್ನು ಒಳಗೊಂಡಂತೆ ಮಾಹಿತಿ ಫಲಕವನ್ನು ಹಾಗೂ ಮಕ್ಕಳ ಸಹಾಯ ವಾಣಿ ಸಂಖ್ಯೆ 1098 ಶಾಶ್ವತ ಫಲಕದಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದರು.
ಪೊಲೀಸ್ ಠಾಣೆಯ ಎಸ್ ಜೆ ಪಿ ಯು ಘಟಕವು ಮಕ್ಕಳ ಪ್ರಕರಣಗಳ ದಾಖಲಾತಿಯನ್ನು ನಿರ್ವಹಿಸಬೇಕು ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಎಸ್ ಜೆ ಪಿ ಯು ಘಟಕದ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಕ್ಕಳ ಪ್ರಕರಣಗಳಿಗೆ ಸಂಬಂಧ ಪಟ್ಟಂತಹ ದಾಖಲಾತಿಯನ್ನು ಸಕಾಲವಾಗಿ ಮತ್ತು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ನಿರ್ದೇಶನ ನೀಡಿದರು.
ಪೊಲೀಸ್ ಇಲಾಖೆಯು ಅಧಿಕಾರಿಗಳು ತಮ್ಮ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಪ್ರತಿ ಗುರುವಾರ ಕಡ್ಡಾಯವಾಗಿ ತೆರೆದ ಮನೆ ಕಾರ್ಯಕ್ರಮ ಆಯೋಜನೆಯ ಮೂಲಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಬೇಕು ಎಂದು ಹೇಳಿದರು. ಇದೇ ವೇಳೆ ಮಕ್ಕಳ ಸಹಾಯವಾಣಿ 112 ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಳ ಛಾಯಾಚಿತ್ರ ಮುದ್ರಣವುಳ್ಳ ಮಗ್ ಬಿಡುಗಡೆಗೊಳಿಸಲಾಯಿತು.
Laxmi News 24×7