ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಕೈಗೊಳ್ಳಲು ಹಿಂದೇಟು ಹಾಕಿರುವ ಬೆಳಗಾವಿ ಮಹಾನಗರ ಪಾಲಿಕೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಲು ಕನ್ನಡ ಸಂಘಟನೆಗಳ ಪದಾಧಿಕಾರಿಗಳು ನಿರ್ಧರಿಸಿದ್ದಾರೆ.
ನಗರ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ’ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ನಿರ್ಣಯ ಕೈಗೊಳ್ಳುವ ಬದಲು ರಾಜ್ಯ ಸರ್ಕಾರ ಅಭಿಪ್ರಾಯ ಪಡೆದುಕೊಳ್ಳುವುದಾಗಿ ಠರಾವು ಕೈಗೊಳ್ಳುವ ಮೂಲಕ ಕನ್ನಡ ವಿರೋಧಿಯಾಗಿ ಸದಸ್ಯರು ವರ್ತಿಸಿದ್ದಾರೆ. ಈ ಕುರಿತು ಪಾಲಿಕೆಯ ಆಡಳಿತ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಲು ಬೆಳಗಾವಿ ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರ ನಿಯೋಗ ತೆಗೆದುಕೊಂಡು ಹೋಗುತ್ತಿದ್ದಾರೆ.
ಈಗಾಗಲೇ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರಿಗೆ ಮನವಿ ಸಲ್ಲಿಸುವುದು ಹಾಗೂ ರಾಜ್ಯದ ಗಡಿ ಹಾಗೂ ಭಾಷಾ ವಿಷಯ ಕುರಿತು ಚರ್ಚಿಸಲು ಸಮಯ ಅವಕಾಶ ಕೇಳಲಾಗಿದೆ ಎಂದು ಕನ್ನಡ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.
ಮಹಾನಗರ ಪಾಲಿಕೆಯ ಸಭೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ವಿಫಲರಾದ ಕನ್ನಡದ ಮಹಾಪೌರ ಮತ್ತು ಉಪ ಮಹಾಪೌರರ ವಿರುದ್ಧ ರಾಜ್ಯವ್ಯಾಪಿ ಚಳವಳಿ ವಿಸ್ತರಿಸಲು ಶೀಘ್ರವೇ ಬೆಂಗಳೂರು,ಬೆಳಗಾವಿ,ಹುಬ್ಬಳ್ಳಿ,ಧಾರವಾಡ,ದಾವಣಗೆರೆ ,ವಿಜಯಪುರ ಜಿಲ್ಲೆಗಳಲ್ಲಿ ಕನ್ನಡ ಪರ ಸಂಘಟನೆಗಳು ಸಭೆಗಳನ್ನು ನಡೆಸಲಾಗುವುದು. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರಬೆಂಗಳೂರಿನ ಕನ್ನಡ ಪರ ಸಂಘಟನೆಗಳ ನಾಯಕರು ಭೇಟಿಯಾಗಿ ಬೆಳಗಾವಿ ಪಾಲಿಕೆಯಲ್ಲಿ ಆಡಳಿತನಡೆಸುತ್ತಿರುವ ಬಿಜೆಪಿ ಮುಖಂಡರ ಕರ್ನಾಟಕ ಹಾಗೂ ಕನ್ನಡ ವಿರೋಧಿ ನಿಲುವಿನ ಬಗ್ಗೆ ಚರ್ಚಿಸಲಿದ್ದಾರೆ. ಪಾಲಿಕೆಯ ಎಲ್ಲ ಸದಸ್ಯರು ಕನ್ನಡಿಗರಿಗೆ ಹಾಗೂ ಕರ್ನಾಟಕಕ್ಕೆ ಬಗೆದ ದ್ರೋಹ ಮಾಡಿದ್ದು, ಅದರ ಫಲವನ್ನು ಅನುಭವಿಸಲಿದ್ದಾರೆ ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.
Laxmi News 24×7