ದಾವಣಗೆರೆ: ಬಾಗಲಕೋಟೆಯಲ್ಲಿ ನಿನ್ನೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಸ್ಟೆಲ್ಗೆ ನುಗ್ಗಿ ಅಲ್ಲಿದ್ದ ವಿದ್ಯಾರ್ಥಿಗಳನ್ನು ಬೆದರಿಸಲು ಮುಂದಾಗಿದ್ದರು. ಇದು ಕಾಂಗ್ರೆಸ್ ಪಕ್ಷದ ಸೋಲಿನ ಆತಂಕಕ್ಕೆ ಸ್ಪಷ್ಟ ಉದಾಹರಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಸರಕಾರಿ ವಾಹನಗಳಲ್ಲಿ ಬಂದಿದ್ದುದಾಗಿ ತಿಳಿಸಿದರು.
ದಾವಣಗೆರೆ- ಬಾಗಲಕೋಟೆಯಲ್ಲಿ ಬಿಜೆಪಿ ಪರವಾದ ವಾತಾವರಣ ಇದೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತದಾರರು ಬದಲಾವಣೆ ಬಯಸುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಅಂತ್ಯ ಹಾಕಬೇಕೆಂಬ ಸ್ಥಿತಿಯಲ್ಲಿದ್ದಾರೆ ಎಂದು ನುಡಿದರು.
ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಾದ್ಯಂತ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ತಮ್ಮನ್ನು ರಾಜಕೀಯ ಲಾಭಕ್ಕಾಗಿ ಬಳಸುತ್ತಿದ್ದಾರೆಂಬ ಭಾವನೆ ಅವರಲ್ಲಿದೆ. ಅಲ್ಪಸಂಖ್ಯಾತರು ಸಹಜವಾಗಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಮುಂದಾಗಲಿದ್ದಾರೆ. ಶಾಮನೂರು ಶಿವಶಂಕರಪ್ಪ ಮತ್ತು ಮೇಟಿಯವರ ನಿಧನದಿಂದ ಈ ಉಪ ಚುನಾವಣೆ ನಡೆಯುತ್ತಿದೆ. ಸಾಮಾನ್ಯವಾಗಿ ಉಪ ಚುನಾವಣೆ ಎಂದಾಗ ಆಡಳಿತ ಪಕ್ಷದ ಅಲೆ ಮತ್ತು ಸಹಾನುಭೂತಿ ಕೆಲಸ ಮಾಡುತ್ತದೆ. ಈ ಬಾರಿ ಹಾಗಿಲ್ಲ. ಎರಡೂ ಕಡೆ ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನೊಂದು ಪ್ರಶ್ನೆಗೆ ಉತ್ತರಿಸಿ, ಎರಡೂ ಕಡೆ ಸೋಲುಂಟಾಗಲಿದೆ ಎಂಬುದು ಸಿದ್ದರಾಮಯ್ಯನವರಿಗೂ ಗೊತ್ತಾಗಿದ್ದು, ಅವರು ಗೊಂದ¯ದಲ್ಲಿದ್ದಾರೆ. ಯಾವ ಕ್ಷೇತ್ರಕ್ಕೆ ಹೆಚ್ಚು ಸಮಯ ಕೊಡಬೇಕೆಂಬ ಗೊಂದಲ ಅವರಲ್ಲಿದೆ ಎಂದರು. ಪೊಲೀಸ್ ಬೇಹುಗಾರಿಕಾ ದಳ ಕೂಡ ಇದೇ ರೀತಿಯ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ನೀಡಿದೆ ಎಂದು ತಿಳಿಸಿದರು. ಎರಡೂ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಕೈಜಾರಿ ಹೋಗುತ್ತಿದ್ದು, ಮುಖ್ಯಮಂತ್ರಿಗಳಿಗೆ ನಿದ್ರೆ ಬರುತ್ತಿಲ್ಲ ಎಂದು ತಿಳಿಸಿದರು.
Laxmi News 24×7