ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು. ಕಾರ್ಯಪಡೆಯ ಮೊದಲ ಸಭೆ ಮುಂದಿನ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಕಾರ್ಯಪಡೆಯ ಮುಖ್ಯಸ್ಥರು ಹಾಗೂ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಕಾರ್ಯಪಡೆಯ ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಕುರಿತು ಚರ್ಚೆ ನಡೆಯಲಿದೆ.
Laxmi News 24×7